ಸೆ. 26ರಿಂದ ಮಂಗಳೂರು ದಸರಾ: ಸರ್ವ ಸಿದ್ಧತೆ

Update: 2022-09-24 14:46 GMT

ಮಂಗಳೂರು, ಸೆ. 24:  ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಆರಂಭಗೊಂಡು ಅ.6ರವರೆಗೆ ನಡೆಯಲಿದ್ದು, ಎಲ್ಲಾ ರೀತಿಯ ಸಿದ್ಧತೆ ನಡೆಸಲಾಗಿದೆ ಎಂದು  ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಲ್ಲಿ ಇಂದು  ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಸರಾ ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 12.30ಕ್ಕೆ ಪುಷ್ಪಾಲಂಕಾರ ಮಹಾಪೂಜೆ, 7.00ರಿಂದ 8.30ರವರೆಗೆ ಭಜನಾ ಕಾರ್ಯಕ್ರಮ, 8.30ರಿಂದ ಶ್ರೀ ದೇವಿ ಪುಷ್ಪಾಲಂಕಾರ ಪೂಜೆ, ಅನ್ನದಾನ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವರ ಬಲಿ ಉತ್ಸವಗಳು ನಡೆಯಲಿದೆ ಎಂದರು.

ಕ್ಷೇತ್ರದ ಕಾರ್ಯದರ್ಶಿ ಮಾಧವ ಸುವರ್ಣ ಮಾತನಾಡಿ, ಸೆ.26ರಂದು ಬೆಳಗ್ಗೆ 9.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನ, ಕಲಶ ಪತ್ರಿಷ್ಠೆಘಿ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ ನಡೆಯಲಿದೆ. ಈ ಸಂದರ್ಭ ದೀಪ ಬೆಳಗುವ ಮೂಲಕ ದಸರಾ ಕಾರ್ಯಕ್ರಮಕ್ಕೆ ಕೇಂದ್ರದ ವಿತ್ತ ಸಚಿವ, ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಚಾಲನೆ ನೀಡಲಿದ್ದಾರೆ. ಶಾಸಕರುಗಳು, ಗಣ್ಯರು ಈ ಸಂದರ್ಭ ಉಪಸ್ಥಿತರಿರುವರು ಎಂದರು.

ಸೆ. 27ರಂದು ಬೆಳಗ್ಗೆ ಗಂಟೆ 10.00ಕ್ಕೆ ದುರ್ಗಾಹೋಮ, ಸೆ. 28ರಂದು ಬೆಳಗ್ಗೆ  ಗಂಟೆ 10.00ಕ್ಕೆ ಆರ್ಯ ದುರ್ಗಾಹೋಮ, ಸೆ. 29ರಂದು ಬೆಳಗ್ಗೆ  ಗಂಟೆ 10.00ಕ್ಕೆ ಅಂಬಿಕಾ ದುರ್ಗಾ ಹೋಮ, ಸೆ.30ರಂದು ಬೆಳಗ್ಗೆ  ಗಂಟೆ 10.00ಕ್ಕೆ ಭಗವತೀ ದುರ್ಗಾ ಹೋಮ (ಲಲಿತಾ ಪಂಚಮಿ), ಸಾಮೂಹಿಕ ಚಂಡಿಕಾ ಹೋಮ, ಅ. 1ರಂದು ಬೆಳಗ್ಗೆ  ಗಂಟೆ 10.00ಕ್ಕೆ ಕುಮಾರಿ ದುರ್ಗಾ ಹೋಮ, ಅ. 2ರಂದು ಬೆಳಗ್ಗೆ 10.00ಕ್ಕೆ ಮಹಿಷಮರ್ದಿನಿ ದುರ್ಗಾ ಹೋಮ, ಅ.3ರಂದು ಬೆಳಗ್ಗೆ  ಗಂಟೆ 10.00ಕ್ಕೆ ಚಂಡಿಕಾಹೋಮ, ಹಗಲೋತ್ಸವ, ದುರ್ಗಾಷ್ಟಮಿ, ಅ.4ರಂದು ಬೆಳಗ್ಗೆ  ಗಂಟೆ 10.00ರಿಂದ ಸರಸ್ವತಿ ದುರ್ಗಾಹೋಮ, 11.30ಕ್ಕೆ ಶತಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಅ. 5ರಂದು ಶೋಭಾಯಾತ್ರೆ

ಅ.5 ರಂದು ಬೆಳಗ್ಗೆ  ಗಂಟೆ 10.00ರಿಂದ ವಾಗೀಶ್ವರಿ ದುರ್ಗಾಹೋಮ, 12.30ಕ್ಕೆ ಶಿವಪೂಜೆ, ಸಂಜೆ 4.00ರಿಂದ ಶ್ರೀ ಶಾರದ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಈ ಮೆರವಣಿಗೆಗೆ ರಾಜ್ಯದ ನಾನಾ ಕಡೆಯಿಂದ ಆಗಮಿಸಿ ಕಲಾತಂಡಗಳು, ಹುಲಿವೇಷ ಹಾಗೂ ಇತರ ವೇಷದ ಟ್ಯಾಬ್ಲೋಗಳು, ವೇಷಭೂಷಣಗಳು, ಚೆಂಡೆ ತಂಡಗಳು ಮೆರುಗು ನೀಡಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ  ಕುದ್ರೋಳಿ ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳ ರಮೇಶ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರ್, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷರಾದ ಅನಸೂಯ ಬಿ.ಟಿ. ಸಾಲಿಯಾನ್, ಉಪಾಧ್ಯಕ್ಷರಾದ ಬಿ.ಜಿ. ಸುವರ್ಣ, ಸದಸ್ಯರಾದ ಚಿತ್ತರಂಜನ್ ಗರೋಡಿ, ರಮಾನಾಥ ಕಾರಂದೂರು, ಜತಿನ್ ಅತ್ತಾವರ, ಗೌರವಿ ಪಿ.ಕೆ., ಕೀಶೋರ್ ದಂಡೆಕೇರಿ, ಲೀಲಾಕ್ಷ ಕರ್ಕೇರಾ ಉಪಸ್ಥಿತರಿದ್ದರು.

7 ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

ದಸರಾ ಮಹೋತ್ಸವ ಮೆರವಣಿಗೆಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಶ್ರೀ ಕ್ಷೇತ್ರದ ಪಾರ್ಕಿಂಗ್ ವ್ಯವಸ್ಥೆ ಮಾತ್ರವಲ್ಲದೆ ಒಟ್ಟು 7ಕಡೆಗಳಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕ್ಷೇತ್ರದ ಭಕ್ತರ  ಸಹಕಾರದಿಂದ ಮಾಡಲಾಗಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.

ಮುಖ್ಯಮಂತ್ರಿಗೆ ಆಹ್ವಾನ

ಕುದ್ರೋಳಿ ದಸರಾ ಮೆರವಣಿಗೆ ಉದ್ಘಾಟನೆಗೆ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಆಶಯದಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದ್ದು, ಅವರು ಆಗಮಿಸುವ ನಿರೀಕ್ಷೆಯಿದೆ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದರು.

ಮನಪಾದಿಂದ 92 ಲಕ್ಷ ರೂ. ವೆಚ್ಚದಲ್ಲಿ ವಿದ್ಯುದ್ದೀಪಾಲಂಕಾರ

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳೂರು ದಸರಾ ಅಂಗವಾಗಿ ನಗರದಲ್ಲಿ ಸುಮಾರು 92 ಲಕ್ಷ ರೂ. ವೆಚ್ಚದಲ್ಲಿ ವಿದ್ಯುದ್ದೀಪಾಲಂಕಾರ ಮಾಡಲು ನಿರ್ಧರಿಸಿರುವುದಾಗಿ ಈಗಾಗಲೇ ಶಾಸಕರು ಹಾಗೂ ಮೇಯರ್ ತಿಳಿಸಿದ್ದಾರೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಕಾರ್ಯದರ್ಶಿ ಬಿ. ಮಾಧವ ಸುವರ್ಣ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News