ಧಾರ್ಮಿಕ ಸ್ವಾತಂತ್ರ್ಯ ಕಸಿಯುತ್ತಿರುವ ಇಂತಹ ವೇಳೆ ಜಾರ್ಜ್ ಫೆರ್ನಾಂಡಿಸ್ ನಮ್ಮೊಂದಿಗೆ ಇರಬೇಕಿತ್ತು: ಸಿದ್ದರಾಮಯ್ಯ

Update: 2022-09-25 14:18 GMT

ಬೆಂಗಳೂರು, ಸೆ.25: ‘ವೈಯಕ್ತಿಕ ಮತ್ತು ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುತ್ತಿರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದ್ದು, ಇಂತಹ ಸಂದಿಗ್ಧ ಸಮಯದಲ್ಲಿ ಜಾರ್ಜ್  ಫೆರ್ನಾಂಡಿಸ್ ಅವರು ನಮ್ಮೊಂದಿಗೆ ಇರಬೇಕಿತ್ತು' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ರವಿವಾರ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಕೇಂದ್ರದ ಮಾಜಿ ಸಚಿವ, ದಿವಂಗತ ಜಾರ್ಜ್ ಫೆರ್ನಾಂಡಿಸ್ ಅವರ ಜೀವನ ಚರಿತ್ರೆ ಕುರಿತಾದ ‘ದಿ ಲೈಫ್ ಆ್ಯಂಡ್ ಟೈಮ್ಸ್ ಆಫ್ ಜಾರ್ಜ್ ಫೆರ್ನಾಂಡಿಸ್’ ಪುಸ್ತಕವನ್ನು ಬಿಡುಗಡೆ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.

ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಾರ್ಜ್ ಫೆರ್ನಾಂಡಿಸ್ ಅವರ ಕುರಿತಾದ ಪುಸ್ತಕವನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ನನ್ನ ರಾಜಕೀಯ ಬದುಕಿನಲ್ಲಿ ಫೆರ್ನಾಂಡಿಸ್ ಅವರಿಗೆ ವಿಶೇಷ ಸ್ಥಾನ ಇದೆ. ಮೈಸೂರಿನಲ್ಲಿ ನಾನು ಕಾನೂನು ವ್ಯಾಸಂಗ ಮಾಡುತ್ತಿದ್ದಾಗ ನನಗೆ ಗುರುಗಳಾದ ಖ್ಯಾತ ಸಮಾಜವಾದಿ ಮತ್ತು ರೈತನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿಗಳು. ಅವರೇ ನನ್ನನ್ನು ರಾಜಕೀಯಕ್ಕೆ ಎಳೆದು ತಂದವರು.ಅವರ ಒತ್ತಾಯದಿಂದ ನಾನು ಸಮಾಜವಾದಿ ಪಕ್ಷ ಸೇರಿದ್ದೆ. ಅವರ ಮೂಲಕ ನನಗೆ ಜಾರ್ಜ್ ಫೆರ್ನಾಂಡಿಸ್ ಪರಿಚಯವಾಗಿದ್ದವರು, ಕನ್ನಡಿಗರೇ ಆಗಿದ್ದರಿಂದ ಹೆಚ್ಚು ಆತ್ಮೀಯರಾಗಿದ್ದರು ಎಂದು ನುಡಿದರು.

ಜಾರ್ಜ್ ಫೆರ್ನಾಂಡಿಸ್ ಅವರಲ್ಲಿ ಸೈದ್ಧಾಂತಿಕ ಬದ್ಧತೆ ಇತ್ತು. ಅವರು ಶೂನ್ಯದಿಂದ ಬಹಳ ಎತ್ತರಕ್ಕೆ ಬೆಳೆದವರು. ಬರಿಗೈಲಿ ಮುಂಬೈಗೆ ಹೋಗಿ, ಅಲ್ಲಿ ಕಾರ್ಮಿಕ ಸಂಘಟನೆಯನ್ನು ಕಟ್ಟಿ, ರಾಜಕೀಯವಾಗಿ ಬೆಳೆದವರು. ದಕ್ಷಿಣ ಭಾರತದಿಂದ ಕೇಂದ್ರಕ್ಕೆ ಹೋಗಿ ರಾಜಕೀಯದಲ್ಲಿ ಯಶಸ್ಸು ಕಂಡವರು  ಬೆರಳೆಣಿಕೆಯ ಮಂದಿ.ಜಾರ್ಜ್ ಮೊದಲ ಚುನಾವಣೆಯಲ್ಲಿಯೇ ಮುಂಬೈನಲ್ಲಿ ಆಗಿನ ಕಾಂಗ್ರೆಸ್ ಪಕ್ಷದ ಜನಪ್ರಿಯ ನೇತಾರ ಎಸ್.ಕೆ.ಪಾಟೀಲ್ ಅವರನ್ನು ಮಣಿಸಿ ಗೆಲುವು ಸಾಧಿಸಿ ‘ಜಾಯಿಂಟ್ ಕಿಲ್ಲರ್’ ಎಂದು ಹೆಸರಾದವರು ಎಂದು ನೆನಪು ಮಾಡಿಕೊಂಡರು.

1980ರಲ್ಲಿ ನಾನು ಮೊದಲ ಬಾರಿ ಚುನಾವಣಾ ರಂಗ ಪ್ರವೇಶಿಸಿದವನು, ಅದಕ್ಕೆ ಜಾರ್ಜ್ ಅವರ ಒತ್ತಾಯವೂ ಕಾರಣ. ನಾನು ಜನತಾ ಪಕ್ಷದ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧಿಸಬೇಕೆಂದು ಜಾರ್ಜ್ ಬಂದು ಕೇಳಿಕೊಂಡರು. ಚುನಾವಣೆ ನನಗೆ ಹೊಸತು, ಅನುಭವವೂ ಇರಲಿಲ್ಲ, ದುಡ್ಡೂ ಇರಲಿಲ್ಲ. ‘ಸಾಂಕೇತಿಕವಾಗಿ ಸ್ಪರ್ಧಿಸಿ, ಸೋಲು-ಗೆಲುವು ಮುಖ್ಯ ಅಲ್ಲ’ ಎಂದು ನನ್ನ ಮನ ಒಲಿಸಿ ಚುನಾವಣೆಗೆ ನಿಲ್ಲಿಸಿದರು. 

ದುಡ್ಡೇನೋ ಸ್ವಲ್ಪ ಕೊಟ್ಟರು, ಅದು ಕೆಲವು ದಿನಗಳಲ್ಲಿ ಖರ್ಚಾಯಿತು. ಅದರ ನಂತರ ಕೈಖಾಲಿ. ಆ ಚುನಾವಣೆಯಲ್ಲಿ  ನಾನು ಹೀನಾಯವಾಗಿ ಸೋತು ಬಿಟ್ಟೆ ಎಂದು ಸಿದ್ದರಾಮಯ್ಯ ಹೇಳಿದರು.

ದಕ್ಷಿಣ ಭಾರತದಲ್ಲಿರುವ ರಾಜಕಾರಣಿಗಳಿಗೆ ಹೊಸದಿಲ್ಲಿ ಭೌಗೋಳಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಬಲು ದೂರ.  ಇದಕ್ಕೆ ಭಾಷೆ ಜೊತೆಗೆ ಅಲ್ಲಿನ ಭಿನ್ನ ಸಸ್ಕೃತಿ, ಆಹಾರ ಪದ್ದತಿ ಕೂಡಾ ಕಾರಣ. ನಾವೆಲ್ಲ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿದರೆ ಒಂದೆರಡು ದಿನಗಳ ವಾಸ್ತವ್ಯ ಮಾಡಿ ಮತ್ತೆ ಕರ್ನಾಟಕಕ್ಕೆ ಓಡಿಬರುತ್ತೇವೆ. ಹಿಂದಿ ಮತ್ತು ಇಂಗ್ಲೀಷ್ ಒಳಗೊಂಡಂತೆ ಹಲವಾರು ಭಾಷೆಗಳನ್ನು ಬಲ್ಲ ಜಾರ್ಜ್ ಫೆರ್ನಾಂಡಿಸ್ ಉತ್ತರಭಾರತೀಯನೇ ಆಗಿಬಿಟ್ಟಿದ್ದರು ಎಂದು ತಿಳಿಸಿದರು.

ಇದಾದ ಬಳಿಕ ಅವರು ಭಾರತೀಯ ಜನತಾ ಪಕ್ಷದ ಜೊತೆ ಸೇರಿಕೊಂಡ ನಂತರ ನನಗೂ ಅವರಿಗೂ ರಾಜಕೀಯ ಭಿನ್ನಾಭಿಪ್ರಾಯಗಳಿತ್ತು. ಕೊನೆ ದಿನಗಳಲ್ಲಿ ಸೈದ್ಧಾಂತಿಕವಾಗಿ ನಾವಿಬ್ಬರೂ ಪರಸ್ಪರ ವಿರುದ್ಧ ಧ್ರುವಗಳಲ್ಲಿದ್ದವರು.ಇದರ ಹೊರತಾಗಿಯೂ ನಾವಿಬ್ಬರು ಆಪ್ತ ಸ್ನೇಹಿತರಾಗಿದ್ದೆವು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ಲೋಕಾಯುಕ್ತದ ಮಾಜಿ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಮಾಜಿ ಸಚಿವ ಎಸ್.ಕೆ.ಕಾಂತ, ಹಿಂದ್ ಮಜ್ದೂರ್ ಕಿಸಾನ್ ಪಂಚಾಯತ್(ಎಚ್‍ಎಂಕೆಪಿ)ರಾಷ್ಟ್ರೀಯ ಅಧ್ಯಕ್ಷ ಮೈಕೆಲ್ ಬಿ. ಫೆನಾರ್ಂಡಿಸ್, ಇತಿಹಾಸ ತಜ್ಞ ರಾಮಚಂದ್ರ ಗುಹಾ, ಲೇಖಕ ಡಾ.ರಾಹುಲ್ ರಾಮಗುಂಡಂ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್,ಸಾಮಾಜಿಕ ಕಾರ್ಯಕರ್ತ ನಂದನ್ ರೆಡ್ಡಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News