ಪಂಚಮಸಾಲಿ 2ಎ ಮೀಸಲಾತಿಗೆ ಬಿಎಸ್‍ವೈ, ಬೊಮ್ಮಾಯಿ ಮೇಲೆ ಒತ್ತಡ ಹಾಕಲಿ: ಜಯಮೃತ್ಯುಂಜಯ ಸ್ವಾಮೀಜಿ

Update: 2022-09-27 14:22 GMT

ಬೆಳಗಾವಿ, ಸೆ.27: ಬಿ.ಎಸ್.ಯಡಿಯೂರಪ್ಪ ತಮ್ಮ ಮಾನಸಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿ ಆಗ್ರಹಿಸಿದ್ದಾರೆ. 

ಮಂಗಳವಾರ ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿಗೂಡಿಸಿದ್ದಾರೆ. ಮುಂದಿನ ದಿನಗಳಲ್ಲೂ ಯಡಿಯೂರಪ್ಪ ತಮ್ಮ ಮಾನಸಪುತ್ರ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿದರು.

ಮುಖ್ಯಮಂತ್ರಿ ಮುಂದಿನ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಭರವಸೆ ನೀಡಿದ್ದಾರೆ. ಈ ಮಾತನ್ನು ಅವರು ತಪ್ಪಿದರೆ ನವೆಂಬರ್ 2ನೆ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನರನ್ನು ಸೇರಿಸಿ ವಿಧಾನಸೌಧ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆ ರವಾನಿಸಿದರು.

ಇದು ಕೊನೆ ಹಂತದ ಪ್ರತಿಭಟನೆ ಆಗಿರುವುದರಿಂದ ‘ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ’ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ. ಬಸವರಾಜ ಬೊಮ್ಮಾಯಿ ಕಂಕಣ ಬದ್ಧರಾಗಿ ಮೀಸಲಾತಿ ಕೊಡಿಸುವಲ್ಲಿ ಯಶಸ್ವಿಯಾಗಬೇಕು ಎಂದು ಅವರು ಆಗ್ರಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News