ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ: ಅವೈಜ್ಞಾನಿಕ ಕಾಮಗಾರಿ ಆರೋಪ

Update: 2022-09-28 16:26 GMT

ಕುಂದಾಪುರ, ಸೆ.28: ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಕಾಮಗಾರಿಯ ಪರಿಣಾಮವಾಗಿ ಬುಧವಾರ ಸಂಜೆ ಜೆಟ್ಟಿ ಕುಸಿದು ಬಿದ್ದಿದ್ದು, ಇದರ ವಿರುದ್ಧ ಸ್ಥಳೀಯ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಸುಮಾರು 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿರುವುದು ಕಂಡುಬಂದಿದೆ. ಇದರಿಂದ ಮೀನುಗಾರರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.  ಸಂಜೆ  ನಿರಂತರವಾಗಿ ಕುಸಿತವಾಗುತ್ತಿದ್ದರೂ ಕೂಡ ಸಂಬಂಧಪಟ್ಟ ಅಧಿಕಾರಿಗಳು ಇತ್ತ ತಲೆ ಹಾಕಿಲ್ಲ ಎಂದು ಮೀನುಗಾರರು ಆರೋಪಿಸಿದ್ದಾರೆ.

ಕಳೆದ 13 ವರ್ಷಗಳ ಹಿಂದೆ ಗಂಗೊಳ್ಳಿ ಜೆಟ್ಟಿ ನಿರ್ಮಾಣವಾಗಿದ್ದು ಈ ಹಳೆ ಜೆಟ್ಟಿ ಕೂಡ ಕುಸಿತಕ್ಕೊಳಗಾಗಿತ್ತು. ಬಳಿಕ ಶಿವಮೊಗ್ಗ ಸಂಸದ ಹಾಗೂ ಬೈಂದೂರು ಶಾಸಕರ ಮುತುವರ್ಜಿಯಲ್ಲಿ 12 ಕೋಟಿ ರೂ. ಅನುದಾನ ನೂತನ ಜೆಟ್ಟಿ ಕಾಮಗಾರಿಗೆ ಮಂಜೂರಾಗಿ 180 ಮೀಟರ್ ಕೆಲಸ ಕೂಡ ನಡೆದಿತ್ತು.

ಮುಂದಿನ ಕಾಮಗಾರಿಗಾಗಿ ಹಳೆ ಜೆಟ್ಟಿಯ ಡಯಪ್ರಮ್ ಹಾಲ್ ನಡುವೆ ಇದ್ದ ರಾಡ್ ತುಂಡರಿಸಿ ಹೊಸ ಪಿಲ್ಲರ್ ಹಾಕಿದ್ದು ಎರಡಕ್ಕೂ ಕೊಂಡಿಯಾಗಿದ್ದ ರಾಡು ತುಂಡರಿಸಿ ಅವೈಜ್ಞಾನಿಕ ಕಾಮಗಾರಿ ಮಾಡಿದ ಪರಿಣಾಮ ಹಳೆ ಜೆಟ್ಟಿ ಕುಸಿತಕ್ಕೊಳಗಾಗಿ ಈಗ ನಡೆಯುತ್ತಿರುವ ಕಾಮಗಾರಿಗಾಗಿ ಮಾಡಿದ ಪಿಲ್ಲರ್ ಮೇಲೆ ಬಿದ್ದು ಹಳೆಯ ಪಿಲ್ಲರ್ ಕೂಡ ಕುಸಿದಿದೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯ ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ 40 ದೊಡ್ಡ ಬೋಟುಗಳು, 100ಕ್ಕೂ ಅಧಿಕ ಟ್ರಾಲ್ ಬೋಟುಗಳು, ಸಿಂಗಲ್ ಬೋಟುಗಳು, 300ಕ್ಕೂ ಅಧಿಕ ನಾಡ ದೋಣಿಗಳು ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ಇಲ್ಲಿನ ಮೀನುಗಾರರು ದೂರದ ಭಟ್ಕಳ ಮೊದಲಾದೆಡೆ ತೆರಳಬೇಕಾದ ಅನಿವಾರ್ಯತೆ ಇದೆ. ಇದೀಗ ಜಟ್ಟಿ ಕಾಮಗಾರಿ ವಿಳಂಬವಾಗುತ್ತಿರುವುದರಿಂದ ಇಲ್ಲಿನ ಮೀನು ಕಾರ್ಮಿಕರು ಅತಂತ್ರರಾಗಿದ್ದಾರೆ. ಹೀಗೆ ಮುಂದುವರಿದರೆ ಇನ್ನು ಒಂದೆರಡು ವರ್ಷ ಅತಂತ್ರತೆ ಜೊತೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ನಿಶ್ಚಿತ ಎನ್ನುತ್ತಾರೆ ಮೀನುಗಾರರು.

ಮೀನುಗಾರರ ಜೀವ-ಜೀವನದ ಜೊತೆ ಚೆಲ್ಲಾಟವಾಡಲಾಗುತ್ತಿದೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸಿ ಮೀನುಗಾರರು ಬದುಕು ಕಟ್ಟಿಕೊಳ್ಳಲು ಕ್ರಮಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News