ಉಡುಪಿ: ಪ್ರಗತಿನಗರದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ
ಉಡುಪಿ, ಅ.1: ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಇನ್ನಷ್ಟು ಆಸಕ್ತಿ ಬೆಳೆದು, ಉತ್ತಮ ಮತ್ತು ಶ್ರೇಷ್ಠ ವಿಜ್ಞಾನಿಗಳು ಜಿಲ್ಲೆಯಿಂದ ಮೂಡಿಬರುವಂತಾಗಲಿ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹಾರೈಸಿದ್ದಾರೆ.
ಶನಿವಾರ ಅಲೆವೂರಿನ ಪ್ರಗತಿ ನಗರದಲ್ಲಿ ಜಿಲ್ಲಾಡಳಿತ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್), ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಅಂದಾಜು ೪ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು.
ಇಂದಿನ ಸ್ಪರ್ಧಾತ್ಮಕ ಯುಗವು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಜಿಲ್ಲೆಯ ವಿದ್ಯಾರ್ಥಿ ಗಳಿಗೂ ಈ ಬಗ್ಗೆ ಅರಿವು ಮೂಡಿಸುವಲ್ಲಿ ವಿಜ್ಞಾನ ಕೇಂದ್ರವು ಸಹಕಾರಿಯಾಗಲಿದೆ. ಇದರಿಂದಾಗಿ ಅವರಲ್ಲಿ ಸಂಶೋಧನಾ ಪ್ರವೃತ್ತಿ ಹೆಚ್ಚುವ ಮೂಲಕ ಉತ್ತಮ ವಿಜ್ಞಾನಿಗಳು ಇಲ್ಲಿಂದ ಮೂಡಿಬರಲಿ ಎಂದವರು ಆಶಿಸಿದರು.
ಈಗಾಗಲೇ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗಳು ವೈಜ್ಞಾನಿಕ ಅರಿವು ಮೂಡಿಸುತ್ತಿದ್ದು, ಇಲ್ಲಿ ಸ್ಥಾಪನೆಗೊಳ್ಳುವ ವಿಜ್ಞಾನ ಕೇಂದ್ರದ ಮೂಲಕ ವಿಜ್ಞಾನದ ಕುರಿತಂತೆ ಇನ್ನೂ ಹೆಚ್ಚಿನ ಆಸಕ್ತಿ, ಕುತೂಹಲ ಹಾಗೂ ಅರಿವು ಮೂಡಲಿದೆ. ಜಿಲ್ಲೆಯ ಬೆಳಪುನಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಸಂಶೋಧನಾ ಕೇಂದ್ರದ ಕಾಮಗಾರಿಯೂ ಶೇ.70ರಷ್ಟು ಮುಕ್ತಾಯ ಗೊಂಡಿದ್ದು, ಕಾಮಗಾರಿ ಶೀಘ್ರದಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆ ಸಮನ್ವಯಾಧಿಕಾರಿ ವಿ.ಡಿ. ಮೊಗೇರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ಕುಮಾರ್, ಅಲೆವೂರು ಗ್ರಾಪಂನ ಸದಸ್ಯರುಗಳು ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಸ್ವಾಗತಿಸಿ, ವಂದಿಸಿದರು.