ಗಾಂಧೀಜಿಯ ಅಹಿಂಸಾ ಸಂದೇಶ ಇಂದಿಗೂ ಪ್ರಸ್ತುತ: ಸಚಿವ ಕೋಟ
ಉಡುಪಿ, ಅ.2: ಮಹಾತ್ಮ ಗಾಂಧೀಜಿ ಅವರು ತಾವು ನೀಡಿದ ಸಂದೇಶಳಿಗೆ ಅನುಗುಣವಾಗಿ ಜೀವನ ನಡೆಸಿ, ಎಲ್ಲರಿಗೂ ಮಾದರಿಯಾದವರು. ಅಹಿಂಸೆಯ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ತೋರಿಸಿ ಕೊಟ್ಟವರು ಅವರು ಎಂದು ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ರವಿವಾರ ನಗರದ ಅಜ್ಜರಕಾಡು ಭುಜಂಗ ಪಾರ್ಕ್ನಲ್ಲಿ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತಿದ್ದರು.
ಮಹಾತ್ಮ ಗಾಂಧೀಜಿ ಜಗತ್ತಿಗೆ ಶಾಂತಿ ಮಂತ್ರವನ್ನು ಬೋಧಿಸಿದವರು. ಅಸ್ಪಶ್ಯತೆ ಕುರಿತು ತೀವ್ರ ವಿರೋಧ ಹೊಂದಿದ್ದರು. ಆದರೆ ಸ್ವಾತಂತ್ರ್ಯದ ೭೫ ವರ್ಷಗಳ ನಂತರವೂ ದೇಶದ ಹಲವೆಡೆ ಇನ್ನೂ ಅಸ್ಪಶ್ಯತೆ ಕಂಡು ಬರುತ್ತಿರು ವುದು ವಿಪರ್ಯಾಸ ಎಂದ ಸಚಿವರು, ಗಾಂಧೀಜಿಯವರ ಆಶಯದಂತೆ ಎಲ್ಲೆಡೆ ಸಮಾನತೆಯ ಅನುಷ್ಠಾನವಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಉಡುಪಿ ಜಿಲ್ಲೆಯ ರಜತ ಮಹೋತ್ಸವದ ಸಂದರ್ಭದಲ್ಲಿ ಉಡುಪಿಯಲ್ಲಿ 3 ಕೋಟಿ ರೂ ವೆಚ್ಚದಲ್ಲಿ ಗಾಂಧೀ ಭವನ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿದ್ದು, ಜಿಲ್ಲೆಯಲ್ಲಿ 50 ಕಿ.ಮೀ. ಒಳಗೆ ದೊರೆಯುವ ನೈಸರ್ಗಿಕ ವಸ್ತುಗಳನ್ನೇ ಬಳಸಿ ಅತ್ಯಂತ ಆಕರ್ಷಕವಾಗಿ ಪರಿಸರ ಸ್ನೇಹಿಯಾಗಿ ಗಾಂಧೀ ಭವನ ನಿರ್ಮಾಣ ಕಾಮಗಾರಿ ನಡೆದು, ಒಂದು ವರ್ಷದೊಳಗೆ ಕಾಮಗಾರಿ ಮುಕ್ತಾಯಗೊಳ್ಳಲಿದೆ ಎಂದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗಾಂಧೀಜಿ ಅವರ ವಿಚಾರಧಾರೆ ಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಗಾಂಧೀ ವಿಚಾರಧಾರೆಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ ನಿರಂತರವಾಗಿ ಸಾರ್ವಜನಿಕರಿಗೆ ತಲುಪಬೇಕು ಎಂದರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಸ್ವಚ್ಛತೆಗೆ ಆದ್ಯತೆ ನೀಡಿದ್ದ ಗಾಂಧೀಜಿ ಅವರ ಚಿಂತನೆಯ ಹಾದಿಯಲ್ಲಿ ಪ್ರಧಾನ ಮಂತ್ರಿಯವರ ಸ್ವಚ್ಛ ಭಾರತ್ ಯೋಜನೆಯ ಕಾರ್ಯಕ್ರಮಗಳನ್ನು ಉಡುಪಿ ನಗರಸಭೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಇತ್ತೀಚೆಗೆ ಉಡುಪಿ ನಗರಸಭೆಗೆ ರಾಜ್ಯ ಪ್ರಶಸ್ತಿ ಕೂಡಾ ದೊರೆತಿದೆ. ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕ್ಲೀನ್ಇಂಡಿಯಾ ಮತ್ತು ಫಿಟ್ಇಂಡಿಯಾ ಕಾರ್ಯಕ್ರಮಗಳು ನಡೆಯಲಿದ್ದು, ಜಿಲ್ಲೆಯ ಸಾರ್ವಜನಿಕರೂ ಇದರಲ್ಲಿ ಪಾಲ್ಗೊಂಡು ಎಲ್ಲಾರೀತಿಯ ಸಹಕಾರ ನೀಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ್ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ್ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪೌರಾಯುಕ್ತ ಉದಯಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕ್ಲೀನ್ಇಂಡಿಯಾ ಕಾರ್ಯಕ್ರಮ ಕುರಿತ ಪೋಸ್ಟರ್ ಬಿಡುಗಡೆ ಗೊಳಿಸಲಾಯಿತು. ಬಳಿಕ ಗಣ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.