BBMP ಚುನಾವಣೆ ನಡೆಸಲು ಆದೇಶ: ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸರಕಾರದ ಚಿಂತನೆ
ಬೆಂಗಳೂರು, ಅ.3: ಬಿಬಿಎಂಪಿಗೆ 2022ರ ಡಿ.31ರೊಳಗೆ ಚುನಾವಣೆ ನಡೆಸಬೇಕೆಂದು ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ನ.30ಕ್ಕೆ ಮೀಸಲಾತಿ ಪಟ್ಟಿ ಪ್ರಕಟಿಸಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ. ನವೆಂಬರ್ ಅಂತ್ಯದಲ್ಲಿ ವಿಭಾಗೀಯ ಪೀಠದ ಮುಂದೆ ಹಳೆಯ ಮೀಸಲಾತಿಯಂತೆಯೇ ಚುನಾವಣೆ ನಡೆಸಬೇಕೆಂದು ರಿಟ್ ಅರ್ಜಿ ಸಲ್ಲಿಸಲು ಉದ್ದೇಶಿಸಲಾಗಿದೆ. ರಾಜ್ಯ ಸರಕಾರದ ಪರವಾಗಿ ಸಾರ್ವಜನಿಕರಿಂದ ರಿಟ್ ಹಾಕಿಸಲು ತೀರ್ಮಾನಿಸಲಾಗಿದೆ.
ಬಿಬಿಎಂಪಿಯ ಪ್ರತಿಯೊಂದು ವಾರ್ಡ್ಗಳಲ್ಲೂ ಟಿಕೆಟ್ ಆಕಾಂಕ್ಷಿಗಳ ದೊಡ್ಡ ದಂಡೇ ಇದೆ. ಈಗ ಚುನಾವಣೆ ನಡೆದರೆ, ಟಿಕೆಟ್ ವಂಚಿತರು ತಮ್ಮ ವಿರುದ್ಧ ತಿರುಗಿ ಬೀಳಲಿದ್ದು, ವಿಧಾನಸಭಾ ಚುನಾವಣೆ ಮೇಲೆ ಪ್ರತಿಕೂಲ ಪರಿಣಾಮ ಬೀಳಲಿದೆ ಎಂಬುದು ಶಾಸಕರ ಲೆಕ್ಕಾಚಾರವಾಗಿದೆ. ಹೀಗಾಗಿಯೇ, ಆಡಳಿತ ಮತ್ತು ಪ್ರತಿಪಕ್ಷ ಶಾಸಕರು ಚುನಾವಣೆಗೆ ಒಲವು ತೋರುತ್ತಿಲ್ಲ.
ಹೈಕೋರ್ಟ್ನ ಏಕಸದಸ್ಯ ಪೀಠವು ವಾರ್ಡ್ ಮರುವಿಂಗಡಣೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದಾರೆ.