5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ಕೈಬಿಡಿ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ರಮೇಶ್ ಬಾಬು

Update: 2022-10-08 07:11 GMT

ಬೆಂಗಳೂರು: 'ರಾಜ್ಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಾರಕವಾಗುವ ಮತ್ತು ಶೈಕ್ಷಣಿಕ ಗುಣಮಟ್ಟದ ಕುಸಿತಕ್ಕೆ ಕಾರಣವಾಗಬಹುದಾದ ಉದ್ದೇಶಿತ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ಕೈಬಿಡಬೇಕು' ಎಂದು ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆಗ್ರಹಿಸಿದ್ದಾರೆ. 

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, 'ಇಲಾಖೆಯ ಕೆಲವು ಅಧಿಕಾರಿಗಳ ಪ್ರತಿಷ್ಠೆಗಾಗಿ ಪಬ್ಲಿಕ್ ಪರೀಕ್ಷೆಗಳನ್ನು ಜಾರಿಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗಾಗಲಿ ಅಥವಾ ಶೈಕ್ಷಣಿಕ ವ್ಯವಸ್ಥೆಗಾಗಲಿ ಯಾವುದೇ ಪ್ರಯೋಜನ ಇರುವುದಿಲ್ಲ' ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

''ಕಳೆದ ಒಂದು ವರ್ಷದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ಗೊಂದಲಮಯ ನೀತಿಗಳಿಂದ ಪದೇ ಪದೇ ಸುದ್ದಿಯಾಗುತ್ತಿದೆ. ಮಕ್ಕಳಿಗೆ ಕಾಲಮಿತಿಯೊಳಗೆ ಸಮವಸ್ತ್ರ ವಿತರಣೆಯ ವೈಫಲ್ಯ, ಶೂ-ಸಾಕ್ಸ್ ವಿತರಣೆಯ ವೈಫಲ್ಯ, ಶೈಕ್ಷಣಿಕ ವರ್ಷದ ವೇಳಾಪಟ್ಟಿಯ ಏರು ಪೇರು, ಪರೀಕ್ಷಾ ಪ್ರಶ್ನೆ ಪತ್ರಿಕೆಯ ಗೊಂದಲ, ಪಠ್ಯಪುಸ್ತಕ ಪರಿಷ್ಕರಣೆಯ ವಿವಾದ, ಶಿಕ್ಷಕರ ವರ್ಗಾವಣೆಯ ನೀತಿ, ಶೈಕ್ಷಣಿಕ ವರ್ಷದ ದಾಖಲಾತಿಯ ನಂತರ ಮೊದಲ ವರ್ಷದ ಪ್ರವೇಶಕ್ಕೆ ವಯೋಮಿತಿ ನಿಗದಿ, ಶಿಕ್ಷಕರ ನೇಮಕಾತಿಯ ವಿಳಂಬ, ಪದೋನ್ನತಿಯಲ್ಲಿ ಅವೈಜ್ಞಾನಿಕ ನೀತಿ, ಖಾಸಗಿ ಶಾಲೆಗಳ ಖಾಲಿ ಹುದ್ದೆ ತುಂಬಲು ನಿಧಾನಗತಿ, ಖಾಸಗಿ ಶಾಲೆಗಳ ಅನುದಾನದ ತಡೆ ಮುಂತಾದ ನಿರಂತರ ವೈಫಲ್ಯಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಯಲು ಮಾಡುತ್ತಿದೆ'' ಎಂದು ಆರೋಪಿಸಿದ್ದಾರೆ. 

''ಇದರ ಮುಂದುವರಿದ ಭಾಗವಾಗಿ ಪ್ರಾಥಮಿಕ ಶಾಲೆಗಳ 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಮಾಡುವುದಾಗಿ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಪ್ರಕಟಿಸುವುದರ ಮೂಲಕ ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡುತ್ತಿದೆ. ಕಲಿಕಾ ಗುಣಮಟ್ಟದ ಹೆಸರಿನಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಯತ್ನಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 12ರಂದು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಿ ನಂತರ ಪಬ್ಲಿಕ್ ಪರೀಕ್ಷೆಯ ಕುರಿತು ಆದೇಶ ಹೊರಡಿಸಿರುವುದಾಗಿ ತಿಳಿಸಿರುತ್ತದೆ. ಈ ಹಿಂದೆ ಸಾರ್ವಜನಿಕ ವಲಯದಿಂದ ಪಬ್ಲಿಕ್ ಪರೀಕ್ಷೆಗೆ ಪ್ರತಿರೋದ ಬಂದಾಗ, ಶಿಕ್ಷಣ ಇಲಾಖೆಯು ಇದೇ ಪರೀಕ್ಷೆಯನ್ನು ಮೌಲ್ಯಾಂಕನ ಪರೀಕ್ಷೆ ಹೆಸರಿನಲ್ಲಿ ನಡೆಸುವ ಮೂಲಕ ಟೀಕೆಗೆ ಒಳಗಾಗಿತ್ತು. ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 1 ಕೋಟಿ 5 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಪಬ್ಲಿಕ್ ಪರೀಕ್ಷೆಗೆ ಪೂರಕವಾದ ಶೈಕ್ಷಣಿಕ ಚಟುವಟಿಕೆ ಹಮ್ಮಿಕೊಳ್ಳದೆ, ಪೂರ್ವ ತಯಾರಿ ಇಲ್ಲದೆ ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಇಂತಹ ಪ್ರಯತ್ನಗಳನ್ನು ಮಾಡಿದರೆ ಅದರ ನಕಾರಾತ್ಮಕ ಪರಿಣಾಮ ವಿದ್ಯಾರ್ಥಿಗಳ ಮೇಲೆ ಉಂಟಾಗುತ್ತದೆ. ಈಗಿನ ವ್ಯವಸ್ಥೆಗೆ ಅನುಗುಣವಾಗಿ ಶಾಲಾ ಹಂತದಲ್ಲಿ ಕಲಿಕಾ ಪದ್ಧತಿಗೆ ಅನುಗುಣವಾಗಿ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪಬ್ಲಿಕ್ ಪರೀಕ್ಷೆಯ ಅವಶ್ಯಕತೆ ಇರುವುದಿಲ್ಲ'' ಎಂದು ಅಭಿಪ್ರಾಯಿಸಿದ್ದಾರೆ.

''ಇಲಾಖೆಯ ಕೆಲವು ಅಧಿಕಾರಿಗಳ ಪ್ರತಿಷ್ಠೆಗಾಗಿ ಪಬ್ಲಿಕ್ ಪರೀಕ್ಷೆಗಳನ್ನು ಜಾರಿಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗಾಗಲಿ ಅಥವಾ ಶೈಕ್ಷಣಿಕ ವ್ಯವಸ್ಥೆಗಾಗಲಿ ಯಾವುದೆ ಪ್ರಯೋಜನ ಇರುವುದಿಲ್ಲ. ಆದುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ರಾಜ್ಯದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮಾರಕವಾಗುವ ಮತ್ತು ಶೈಕ್ಷಣಿಕ ಗುಣಮಟ್ಟದ ಕುಸಿತಕ್ಕೆ ಕಾರಣವಾಗಬಹುದಾದ ಉದ್ದೇಶಿತ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ಕೈಬಿಡಲು ಸೂಚಿಸಬೇಕು'' ಎಂದು ರಮೇಶ್ ಬಾಬು ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News