×
Ad

ಶೀಘ್ರದಲ್ಲೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

Update: 2022-10-14 21:05 IST

ಬೆಂಗಳೂರು, ಅ. 14: ‘ರಾಜ್ಯ ಸರಕಾರಿ ನೌಕರರಿಗೆ ನೀಡಿದ್ದ ಭರವಸೆಯಂತೆ ವೇತನ ಹೆಚ್ಚಳ ಸಂಬಂಧ ಈ ತಿಂಗಳಲ್ಲಿಯೇ ಏಳನೆ ವೇತನ ಆಯೋಗ ರಚನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಪ್ರಕಟಿಸಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗವು ಸಿಎಂ ಅವರನ್ನು ಖುದ್ದು ಭೇಟಿಯಾಗಿ, ಪುಣ್ಯಕೋಟಿ ದತ್ತು ಯೋಜನೆಗೆ ನೌಕರರು ಹಾಗೂ ಸರಕಾರದ ಇತರೆ ಸಂಸ್ಥೆಗಳ ನೌಕರರು ದೇಣಿಗೆ ನೀಡಲು ಸಮ್ಮತಿಸಿರುವ ಕುರಿತು ಸಮ್ಮತಿ ಪತ್ರವನ್ನು ಸಿಎಂಗೆ ಹಸ್ತಾಂತರಿಸಿದರು.

ಆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬರ, ಪ್ರವಾಹ, ಕೋವಿಡ್ ಮುಂತಾದ ಸಂಕಷ್ಟದ ಸಂದರ್ಭಗಳಲ್ಲಿ ಸರಕಾರಿ ನೌಕರರು ಅತ್ಯಂತ ಬದ್ಧತೆಯಿಂದ ಕಾರ್ಯನಿರ್ವಹಿಸಿದ್ದಾರೆ. ಈ ಹಿಂದೆ ಭರವಸೆ ನೀಡಿದಂತೆ, ಈ ತಿಂಗಳಲ್ಲಿಯೇ ವೇತನ ಆಯೋಗ ರಚಿಸಲಾಗುವುದು. ನೌಕರರಿಗೆ ವೇತನ-ಭತ್ಯೆಗಳೊಂದಿಗೆ, ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಪ್ರೋತ್ಸಾಹಕಗಳನ್ನು ನೀಡುವುದು' ಎಂದು ಘೋಷಿಸಿದರು.

ನೌಕರರ ಸಂಘದ ಈ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು,‘ರಾಜ್ಯ ಸರಕಾರದ ಗೋಶಾಲೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮುದಿ ಗೋವುಗಳು ಆಶ್ರಯ ಪಡೆದಿವೆ. ಇವುಗಳ ಸಮರ್ಪಕ ಪಾಲನೆ ಪೋಷಣೆ ನಮ್ಮೆಲ್ಲರ ಕರ್ತವ್ಯವೂ ಹೌದು. ಈ ಪುಣ್ಯದ ಕೆಲಸದಲ್ಲಿ ಸರಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಲು ಮುಂದಾಗಿರುವುದು ಅಭಿನಂದನಾರ್ಹ' ಎಂದು ತಿಳಿಸಿದರು.

‘ಸರಕಾರಿ ನೌಕರರ ಕಾರ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮೊದಲಾದ ಅಂಶಗಳ ಕುರಿತು ಪರಿಶೀಲಿಸಲಾಗುವುದು.ರಾಜ್ಯ ಸರಕಾರದ ಗೋಶಾಲೆಗಳಲ್ಲಿ 1ಲಕ್ಷಕ್ಕೂ ಹೆಚ್ಚು ಗೋವುಗಳು ಆಶ್ರಯ ಪಡೆದಿವೆ. ಇವುಗಳ ಸಮರ್ಪಕ ಪಾಲನೆ ಪೋಷಣೆ ನಮ್ಮೆಲ್ಲರ ಕರ್ತವ್ಯ.. ಈ ಪುಣ್ಯದ ಕೆಲಸದಲ್ಲಿ ಸರಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಕೈಜೋಡಿಸಲು ಮುಂದಾಗಿರುವುದು ಅಭಿನಂದನಾರ್ಹ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚೆಗೆ ಸಮಾರಂಭವೊಂದರಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ನೌಕರರ ಸಂಘವು, ರಾಜ್ಯ ಸರಕಾರಿ ನೌಕರರು ಮತ್ತು ಸರಕಾರದ ಇತರ ಸಂಸ್ಥೆಗಳ ನೌಕರರು ಸ್ವ-ಇಚ್ಛೆಯಿಂದ ದೇಣಿಗೆ ನೀಡಲು ಮುಂದಾಗಿದ್ದು, ಗ್ರೂಪ್ ‘ಎ' ಅಧಿಕಾರಿಗಳು 11ಸಾವಿರ ರೂ., ಗ್ರೂಪ್‘ಬಿ' ಅಧಿಕಾರಿಗಳು 4ಸಾವಿರ ರೂ. ಹಾಗೂ ‘ಸಿ' ವೃಂದದ ನೌಕರರು 400ರೂ. ದೇಣಿಗೆಯನ್ನು ಒಂದು ಬಾರಿಗೆ ಪಾವತಿಸಲು ಸಮ್ಮತಿಸಿದ್ದಾರೆ. ಇದನ್ನು ಅಕ್ಟೋಬರ್ ಹಾಗೂ ನವೆಂಬರ್ ತಿಂಗಳ ವೇತನದಲ್ಲಿ ಕಟಾಯಿಸುವಂತೆ ಕೋರಿದ್ದಾರೆ. ಈ ಮೊತ್ತವು ಸುಮಾರು 80 ರಿಂದ 100 ಕೋಟಿ ರೂ.ಗಳಾಗಲಿದೆ ಎಂದು ಅಂದಾಜಿಸಲಾಗಿದೆ' ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News