ಕೊಟ್ಪಾ ಕಾಯ್ದೆ: ಕಟ್ಟುನಿಟ್ಟಿನ ಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಸೂಚನೆ
ಮಂಗಳೂರು : ತಂಬಾಕು ನಿಯಂತ್ರಣ ಕಾರ್ಯಕ್ರಮಗಳಡಿ ಕೊಟ್ಪಾ-2003ರ ಕಾಯ್ದೆಯ ಕಾರ್ಯಚರಣೆಗಳನ್ನು ಮತ್ತಷ್ಟು ಚುರುಕುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಕೆ.ಎಚ್. ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದ.ಕ.ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದರೊಂದಿಗೆ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದಲ್ಲಿ ಕೊಟ್ಪಾ ನಿಯಂತ್ರಣ ಸಮನ್ವಯ ಸಮಿತಿಗಳು ಕಾರ್ಯಾಚರಣೆ ಚುರುಕುಗೊಳಿಸಬೇಕು. ಬೀಡಿ, ಸಿಗರೇಟು ಸಹಿತ ಬೇರೆ ಬೇರೆ ರೂಪಗಳಲ್ಲಿ ತಂಬಾಕು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕ. ಕ್ಯಾನ್ಸರ್ ಸಹಿತ ಹಲವಾರು ರೋಗಗಳು ಬರುತ್ತವೆ. ಮಕ್ಕಳಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರೆ ಸಮಾಜದ ಸ್ವಾಸ್ತ್ಯ ಕಾಪಾಡಬಹುದು ಎಂದು ಅಭಿಪ್ರಾಯಪಟ್ಟರು.
ತಂಬಾಕು ಮುಕ್ತ ಶೈಕ್ಷಣಿಕ ವಿದ್ಯಾಸಂಸ್ಥೆಯ ಮಾರ್ಗಸೂಚಿಯಂತೆ ಯೆನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯ ವನ್ನು ತಂಬಾಕು ಮುಕ್ತ ಪರಿಗಣಿತ ವಿಶ್ವವಿದ್ಯಾನಿಲಯ ಎಂದು ಘೋಷಿಸಲು ಒಪ್ಪಿಗೆ ನೀಡಿದ ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನೂ ಕೂಡ ತಂಬಾಕು ಮುಕ್ತ ವಿಶ್ವ ವಿದ್ಯಾನಿಲಯ ಎಂದು ಘೋಷಿಸಲು ಕ್ರಮ ವಹಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವೆನ್ಲಕ್ ಆಸ್ಪತ್ರೆಯನ್ನು ತಂಬಾಕು ಮುಕ್ತ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ಜನ್ ನೇತೃತ್ವದಲ್ಲಿ ತನಿಖಾ ದಳ ರಚಿಸುವಂತೆ ತಿಳಿಸಿದ ಕೃಷ್ಣಮೂರ್ತಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು ಕನಿಷ್ಠ ಒಂದು ಹಳ್ಳಿಯನ್ನಾದರೂ ತಂಬಾಕು ಮುಕ್ತ ಗ್ರಾಮವನ್ನಾಗಿಸುವತ್ತ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸದಾಶಿವ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್, ಜಿಲ್ಲಾತಂಬಾಕು ನಿಯಂತ್ರಣ ಕೋಶದ ಪುಂಡಲೀಕ ಲಕಾಟಿ, ಶ್ರುತಿ ಸಾಲ್ಯಾನ್, ವಿಜಯ್, ವಿದ್ಯಾ ಸಭೆಯಲ್ಲಿ ಉಪಸ್ಥಿತರಿದ್ದರು.