‘ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?’: ಪ್ರಧಾನಿ ಮೋದಿಗೆ 15 ಪ್ರಶ್ನೆಗಳನ್ನು ಕೇಳಿದ ರಾಮಲಿಂಗಾರೆಡ್ಡಿ

Update: 2022-11-09 15:06 GMT

ಬೆಂಗಳೂರು, ನ.9: ಡಬಲ್ ಇಂಜಿನ್ ಸರಕಾರ ಕರ್ನಾಟಕದಲ್ಲಿ ಏನು ಸಾಧನೆ ಮಾಡಿದೆ ಎಂದು ಉತ್ತರಿಸುವ ಧಮ್ಮು, ತಾಕತ್ತು 56 ಇಂಚಿನ ಎದೆಯ, ಮಾತಿನ ಮಲ್ಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೆ ಎಂದು ಭಾವಿಸಿ 15 ಪ್ರಶ್ನೆಗಳನ್ನು ಕೇಳ ಬಯಸುತ್ತಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ತಿಳಿಸಿದರು.

ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ 2.62ಲಕ್ಷ ಮನೆಗಳು, 1.5 ಲಕ್ಷ ಕಿ.ಮೀ ರಸ್ತೆಗಳು, 30 ಸಾವಿರ ಸೇತುವೆಗಳು, 54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ. ಒಟ್ಟು 93,648 ಕೋಟಿ ರೂ.ಗಳಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು? ಎಂದು ಪ್ರಶ್ನಿಸಿದರು.

ಸ್ಮಾರ್ಟ್ ಸಿಟಿ, ಜಲ್ ಜೀವನ ಮಿಷನ್, 2 ಕೋಟಿ ಉದ್ಯೋಗ, ರೈತರ ಆದಾಯ ಡಬಲ್ (2022 ಒಳಗೆ), ಎಲ್ಲರಿಗೂ ಸ್ವಂತ ಸೂರು (2022 ಒಳಗೆ) ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ? ಕೇಂದ್ರ ಸರಕಾರಕ್ಕೆ ಅತಿಹೆಚ್ಚು ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ. ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಅವರು ಪ್ರಶ್ನಿಸಿದರು.

ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ? ನೀವು ಬಂದಾಗ ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ಸರಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿತು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕಿತ್ತು ಬಂದವು. ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಎಂದು ರಾಮಲಿಂಗಾರೆಡ್ಡಿ ಪ್ರಶ್ನಿಸಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40 ಪರ್ಸೆಂಟ್ ಕಮಿಷನ್ ಕುರಿತ ದೂರು, ರೂಪ್ಸಾ ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ? ಎಂದು ಅವರು ಪ್ರಶ್ನಿಸಿದರು.

ಪಿಎಸ್ಸೈ, ಶಿಕ್ಷಕರು, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಈ.ಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ? ಎಂದು ಅವರು ಪ್ರಶ್ನಿಸಿದರು.

ಬೆಂಗಳೂರು ನಗರ ನಿಮ್ಮ ಆಡಳಿತದಲ್ಲಿ ಸಿಂಕಿಂಗ್ ಸಿಟಿ, ಗಾರ್ಬೇಜ್ ಸಿಟಿ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು? ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ಡಬಲ್ ಇಂಜಿನ್ ಸರಕಾರ ಹೊರಬೇಕಲ್ಲವೆ? ಮೇಕೆದಾಟು ಯೋಜನೆ ಜಾರಿ ವಿಚಾರ ಎಲ್ಲಿಯವರೆಗೂ ಬಂತು? ಮಹಾದಾಯಿ ಯೋಜನೆ ಜಾರಿ ಯಾವಾಗ? ಎಂದು ಅವರು ಪ್ರಶ್ನಿಸಿದರು.

ಕೋವಿಡ್ ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ? ನಿಮ್ಮ ಸರಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ? ಕೆಂಪೇಗೌಡರು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ನಿಮ್ಮ ಸರಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ? ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

‘ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮ ಪಾಲಿಸಿದರೆ, ಬಿಜೆಪಿ ಚುನಾವಣೆಗಾಗಿ ಹಿಂದೂ ಧರ್ಮ ಎಂದು ಮಾತನಾಡುತ್ತಾರೆ. ನಮ್ಮದು ಸನಾತನ ಧರ್ಮ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ಸತೀಶ್ ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಕಾಂಗ್ರೆಸ್‍ನವರು ಕಟ್ಟಿದಷ್ಟು ದೇವಾಲಯಗಳು, ದೇವಾಲಯಗಳ ಅಭಿವೃದ್ಧಿ ಹಾಗೂ ಜೀರ್ಣೋದ್ದಾರ ಕಾರ್ಯಗಳಲ್ಲಿ ಬಿಜೆಪಿಯವರು ಶೇ.10ರಷ್ಟು ಮಾಡಿಲ್ಲ’

-ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ

Similar News