ಉಡುಪಿ: ಪುಸ್ತಕ ಓದಿ ಬಹುಮಾನ ಗೆಲ್ಲಿ ಸ್ಪರ್ಧೆ
ಉಡುಪಿ: ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯ ಮಕ್ಕಳ ಸಮುದಾಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದಿ; ಬಹುಮಾನ ಗೆಲ್ಲಿ’ ಸ್ಫರ್ಧೆಯನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಅಜ್ಜರಕಾಡು ವಾರ್ಡಿನ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಉದ್ಘಾಟಿಸಿ ಮಾತನಾಡಿ, ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಮುಂದಿನ ದಿನಗಳನ್ನು ನೀವು ಉತ್ತಮ ವಾಗ್ಮಿಗಳಾಗಬಹುದು ಅಥವಾ ನಾಗರಿಕ ಸೇವೆಗೂ ಸೇರಬಹುದು ಎಂದರು.
ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಹಾಗೂ ಸಾಹಿತಿ ಮತ್ತು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯೆ ಸಂಗೀತ ಜಾನ್ಸನ್ ತೀರ್ಪುಗಾರರಾಗಿ ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿದರು. ಗ್ರಂಥಪಾಲಕರಾದ ಸಿ. ರಂಜಿತಾ ಕಾರ್ಯಕ್ರಮ ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಪ್ರೇಮ ಎಂ. ವಂದಿಸಿದರು.