ಎಲ್ಲೇ ಸ್ಪರ್ಧಿಸಿದರೂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಕಣಕ್ಕೆ: ಸಚಿವ ಶ್ರೀರಾಮುಲು

Update: 2022-11-13 14:07 GMT

ಕೊಪ್ಪಳ, ನ. 13: ‘ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಕ್ಷೇತ್ರ ಹುಡುಕಾಟದಲ್ಲಿದ್ದು, ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರ ಸೋಲು ನಿಶ್ಚಿತ. ಅವರ ವಿರುದ್ಧ ಯಾರೂ ಊಹಿಸಲು ಸಾಧ್ಯವಿಲ್ಲದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ರವಿವಾರ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡುತ್ತಿರುವುದು ಕೇವಲ ಚುನಾವಣಾ ಗಿಮಿಕ್ ಅಷ್ಟೇ. ಅವರು ಕೊನೆಯದಾಗಿ ಸ್ಪರ್ಧಿಸುವುದು ವರುಣ ಕ್ಷೇತ್ರದಲ್ಲಿ. ಆದರೆ, ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರನ್ನು ಸೋಲಿಸಲು ನಮ್ಮ ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

‘ಸಿದ್ದರಾಮಯ್ಯರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಬಾದಾಮಿ ಕ್ಷೇತ್ರದ ಜನರಿಗೆ ಮೋಸ ಮಾಡುತ್ತಿದ್ದಾರೆ. ಬಾದಾಮಿ ಕ್ಷೇತ್ರದಿಂದ ಆಯ್ಕೆಯಾದ ಸಿದ್ದರಾಮಯ್ಯ ಕ್ಷೇತ್ರದ ಜನತೆಗೆ ಮಾಡಿದ್ದೇನು? ಈಗ ಗೆದ್ದ ಕ್ಷೇತ್ರವನ್ನು ಬಿಟ್ಟು ಬೇರೆಡೆ ಮುಖ ಮಾಡಿದ್ದಾರೆ. ಅವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿ, ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಅವರ ವಿರುದ್ಧ ಹಾಕಲಾಗುವುದು’ ಎಂದು ರಾಮುಲು ಹೇಳಿದರು.

Full View

Similar News