ನ.18: ಸಮುದಾಯ ಆರೋಗ್ಯ ನೌಕರರಿಂದ ರಾಜ್ಯದಾದ್ಯಂತ ಪ್ರತಿಭಟನೆ
ಪುತ್ತೂರು; ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಯನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಮುದಾಯ ಆರೋಗ್ಯಕೇಂದ್ರದ ನೌಕರರ ನ. 18ರಂದು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜ್ಯೋತಿ ಜೆ.ಆರ್ ತಿಳಿಸಿದ್ದಾರೆ.
ಅವರು ಸೋಮವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಉಪಕೇಂದ್ರಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಯನ್ನು ಖಾಯಂ ಗೊಳಿಸಬೇಕು. ಭಾರತ ಸರ್ಕಾರ ನೀಡುವ ರೂ.15 ಸಾವಿರ ಪ್ರೋತ್ಸಾಹಧನವನ್ನು ರಾಜ್ಯದಲ್ಲಿ ಕಡಿತಗೊಳಿಸುವುದನ್ನು ನಿಲ್ಲಿಸಿ ಪೂರ್ಣವಾಗಿ ನೀಡಬೇಕು. ಸಮುದಾಯ ಆರೋಗ್ಯಾಧಿಕಾರಿಗಳನ್ನು ಇತರ ಕಾರ್ಯಗಳಿಗೆ ನಿಯೋಜನೆಗೊಳಿಸುವುದನ್ನು ನಿಲ್ಲಿಸಬೇಕು. ಮುಂತಾದ ಹಲವು ಬೇಡಿಕೆಗಳನ್ನು ಪ್ರತಿಭಟನೆಯ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸಮುದಾಯ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಹಳ್ಳಿ, ತಾಲೂಕು ಅಧ್ಯಕ್ಷ ಗುರುರಾಜ್, ಮಾಧ್ಯಮ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.