ಉಡುಪಿ: ಬಾಲಕಿಯ ಅಪಹರಿಸಿ, ಅತ್ಯಾಚಾರ ಪ್ರಕರಣ; ಆರೋಪಿಗೆ 10 ವರ್ಷ ಜೈಲುಶಿಕ್ಷೆ

Update: 2022-11-18 14:42 GMT

ಉಡುಪಿ, ನ.18: ಏಳು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.

ಭರತ್ (30) ಶಿಕ್ಷೆಗೆ ಗುರಿಯಾದ ಆರೋಪಿ.

ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಮತ್ತು ಮದುವೆ ಯಾಗುವುದಾಗಿ ನಂಬಿಸಿ ಪುಸಲಾಯಿಸಿ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವಾಗ ಆಕೆಯ ಇಚ್ಛೆಯ ವಿರುದ್ಧವಾಗಿ ದೈಹಿಕ ಸಂಪರ್ಕ ನಡೆಸಿದ್ದನು. ನಂತರ ಆಕೆಯನ್ನು ಮನೆಯಿಂದ ಆಕೆಯ ಪಾಲಕರು ಮತ್ತು ಆಕೆಯ ಒಪ್ಪಿಗೆ ಇಲ್ಲದೆ ಕಾರಿನಲ್ಲಿ ಅಪಹರಿಸಿಕೊಂಡು ಬೆಂಗಳೂರು ಕಡೆಗೆ ಹೋಗಿದ್ದನು.

ದಾರಿ ಮಧ್ಯೆ ದೇವಸ್ಥಾನವೊಂದರ ಹೊರಗೆ ತಾನು ತಂದಿದ್ದ ಅರಶಿನ ದಾರ ವನ್ನು ಆಕೆಯ ಕೊರಳಿಗೆ ಕಟ್ಟಿ ನಮ್ಮ ಮದುವೆ ಆಗಿರುವುದಾಗಿ ತಿಳಿಸಿ ಬೆಂಗಳೂರಿನಲ್ಲಿ ರೂಮಿಗೆ ಕರೆದುಕೊಂಡು ಹೋಗಿದ್ದನು. ಆಕೆಯ ತಂದೆ ಬಾಲಕಿ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿ ಮತ್ತು ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆ  ಮಾಡಿ ಕರೆತಂದಿದ್ದರು.

ಬಾಲಕಿಯ ದೂರಿನಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಮುಂದೆ ಆರೋಪಿ ಜಾಮೀನು ಪಡೆದು ಬಿಡುಗಡೆ ಗೊಂಡಿದ್ದನು. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯ ಆಗಿನ ಎಸ್ಸೈ ಸುಜಾತ ಸಾಲ್ಯಾನ್ ತನಿಖೆ ನಡೆಸಿದ್ದು, ಮುಂದುವರೆದ ತನಿಖೆಯನ್ನು ಆಗಿನ ಕುಂದಾಪುರ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ನಡೆಸಿ, ಆರೋಪಿ ವಿರುದ್ಧ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಒಟ್ಟು 21 ಸಾಕ್ಷಿಗಳ ಪೈಕಿ 20 ಸಾಕ್ಷಿದಾರರ ವಿಚಾರಣೆ ನಡೆಸಲಾಗಿದ್ದು, ಪ್ರಮುಖವಾಗಿ ನೊಂದ ಬಾಲಕಿಯ ಸಾಕ್ಷಿ ಆರೋಪಿ ದೋಷಿ ಎಂಬುದನ್ನು ಸಾಬೀತು ಪಡಿಸುವಲ್ಲಿ ಅಭಿಯೋಜನೆಗೆ ಸಹಕಾರಿಯಾಗಿತ್ತು. ಅಪ್ರಾಪ್ತ ಬಾಲಕಿಯ ಅಪಹರಣಕ್ಕೆ 3ವರ್ಷಗಳ ಜೈಲುಶಿಕ್ಷೆ, ಅತ್ಯಾಚಾರಕ್ಕೆ 10 ವರ್ಷ ಕಠಿಣ ಶಿಕ್ಷೆ ಮತ್ತು ಸರಕಾರದಿಂದ ಒಂದು ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದಿಸಿದ್ದರು.

Similar News