×
Ad

ಗ್ರಾಹಕರು-ರೈತರ ಹಿತ ಕಾಯಲು ಸೂತ್ರ ರೂಪಿಸುವಂತೆ ಕೆಎಂಎಫ್ ಗೆ ಸೂಚನೆ ನೀಡಿದ್ದೇನೆ: ಸಿಎಂ ಬೊಮ್ಮಾಯಿ

ಹಾಲಿನ ದರ ಹೆಚ್ಚಳ ವಿಚಾರ

Update: 2022-11-21 20:52 IST

ಬೆಂಗಳೂರು, ನ. 21: ‘ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರು, ಹಾಲು ಉತ್ಪಾದಕರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಬೇಕು ಎಂದು ಕರ್ನಾಟಕ ಹಾಲು ಮಹಾ ಮಂಡಳ(ಕೆಎಂಎಫ್)ಕ್ಕೆ ಸೂಚನೆ ನೀಡಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಇನ್ನಿತರ ಅಧಿಕಾರಿಗಳೊಂದಿಗೆ ಹಾಲಿನ ದರ ಏರಿಕೆಯ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಿವಿಧ ರಾಜ್ಯಗಳಲ್ಲಿರುವ ಹಾಲಿನ ದರ ಹಾಗೂ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ, ಹಾಲಿನ ದರ ಏರಿಕೆಗೆ  ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ಸೋರಿಕೆಗಳು, ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ’ ಎಂದು ಅವರು ಹೇಳಿದರು. 

ಗ್ರಾಹಕರು ಹಾಗೂ ರೈತನಿಗೆ ಅನುಕೂಲವಾಗುವ ಸೂತ್ರವನ್ನು ಎರಡು ದಿನಗಳಲ್ಲಿ ರೂಪಿಸಿಕೊಂಡು, ಕೆಎಂಎಫ್ ನಿರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. 3 ರೂ.ದರ ಹೆಚ್ಚಳ ಮಾಡುವುದು ಬೇಡ, ಆದರೆ ರೈತರು ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಗ್ರಾಹಕರು ಹಾಗೂ ರೈತನ ಹಿತಚಿಂತನೆ ಸರಕಾರದ ಕರ್ತವ್ಯ: ಕೆಎಂಎಫ್ ಕೂಡ ಸರಕಾರದ ಒಂದು ಅಂಗವಾಗಿದ್ದು, ರೈತರಿಗೆ ಪ್ರೋತ್ಸಾಹ ಧನ, ಶಾಲಾ ಮಕ್ಕಳಿಗೆ ಹಾಲು ನೀಡಲಾಗುತ್ತಿದೆ. ಗ್ರಾಹಕರ ಹಾಗೂ ರೈತರ ಹಿತಚಿಂತನೆ ಮಾಡುವ ಕರ್ತವ್ಯ ಸರಕಾರದ್ದಾಗಿದ್ದು, ಕೆಎಂಎಫ್ ಗೆ ಮಾರ್ಗದರ್ಶನ ನೀಡಲಾಗಿದೆ ಎಂದು ಅವರು ಹೇಳಿದರು.

‘ಹಾಲಿನ ದರ ಕಾಲಕಾಲಕ್ಕೆ ಬದಲಾವಣೆಯಾಗುತ್ತದೆ. ಈ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಗಳೂ ಸ್ಪರ್ಧೆಯಲ್ಲಿವೆ. ಈ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕೆಂದು ಕೆಎಂಎಫ್‍ಗೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಣೆ ನೀಡಿದರು.

Similar News