ಏಕೀಕರಣ ಹೋರಾಟದಲ್ಲಿ ಪಾಲ್ಗೊಂಡ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ: ಸಿಎಂ ಬೊಮ್ಮಾಯಿ ಘೋಷಣೆ
''ರಾಜ್ಯಗಳ ನಡುವೆ ಕಲಹ ಉಂಟು ಮಾಡುವ ಕೆಲಸ ಮಹಾರಾಷ್ಟ್ರ ಸರ್ಕಾರ ಮಾಡಬಾರದು''
Update: 2022-11-22 06:34 GMT
ಬೆಂಗಳೂರು,ನ.22: ''ಮಹಾರಾಷ್ಟ್ರ ದಲ್ಲಿರುವ ಕನ್ನಡಿಗರಿಗೆ, ಏಕೀಕರಣ ಹೋರಾಟ, ಸ್ವಾತಂತ್ರ್ಯ ಹೋರಾದಲ್ಲಿ ಕೆಲಸ ಮಾಡಿದವರಿಗೆ ಪಿಂಚಣಿ ಕೊಡುವ ತೀರ್ಮಾನವನ್ನು ನಮ್ಮ ಸರ್ಕಾರ ಮಾಡಿದೆ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಮಂಗಳವಾರ ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಮರಾಠಿಗರಿಗೆ ಜೀವ ವಿಮೆ ಘೋಷಣೆ, ಸ್ವಾತಂತ್ರ್ಯ ಯೋಧರಿಗೆ ಪಿಂಚಣಿ ಹೆಚ್ಚಳ ಮಾಡುವ ಮೂಲಕ ಮಹಾರಾಷ್ಟ್ರ ಸರ್ಕಾರ ಕುಮ್ಮಕ್ಕು ನಡೆಸುತ್ತಿರುವ ವಿಚಾರಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದರು.
''ನಾವು ಎಲ್ಲ ಭಾಷಿಕರನ್ನೂ ಒಂದೇ ರೀತಿಯಲ್ಲಿ ನೋಡುತ್ತೇವೆ. ರಾಜ್ಯಗಳ ನಡುವೆ ಕಲಹ ಉಂಟು ಮಾಡುವ ಕೆಲಸ ಮಹಾರಾಷ್ಟ್ರ ಸರ್ಕಾರ ಮಾಡಬಾರದು'' ಎಂದು ತಿಳಿಸಿದರು.