ಫಾರಂ 7 ಇಲ್ಲದೇ ಮತದಾರರ ಪಟ್ಟಿಯಿಂದ 27 ಲಕ್ಷ ಹೆಸರು ತೆಗೆದಿದ್ದು ಹೇಗೆ?: ಡಿ.ಕೆ. ಶಿವಕುಮಾರ್

''ನಾಳೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ''

Update: 2022-11-22 07:59 GMT

ಬೆಂಗಳೂರು: ''ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳು ಇಲ್ಲದೆ 27 ಲಕ್ಷ ಹೆಸರು ತೆಗೆದಿದ್ದು ಹೇಗೆ? ಇವುಗಳಿಗೆ ಸಹಿ ಹಾಕಿದವರು ಯಾರು?'' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. 

ಮಂಗಳವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '' ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ'' ಎಂದು ಹೇಳಿದರು. 

''ಚುನಾವಣಾ ಆಯೋಗ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ. ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8250 ಬೂತ್ ಗಳಿವೆ. ಪ್ರತಿ ಬೂತ್ ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, 7 ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು'' ಎಂದು ಒತ್ತಾಯಿಸಿದರು. 

ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, '' ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದು, ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿ ಅವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ.  ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ'' ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು. 

Full View

Similar News