ಅಕ್ರಮ ಆಸ್ತಿಗಳಿಕೆ ಆರೋಪ : ಶಿಕ್ಷೆಗೆ ಗುರಿಯಾಗಿದ್ದ ಪೊಲೀಸ್ ಅಧಿಕಾರಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2022-11-22 13:05 GMT

ಬೆಂಗಳೂರು, ನ.22: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.   

ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಮತ್ತು ಪ್ರಕರಣ ರದ್ದು ಕೋರಿ ಉಡುಪಿಯ ಕರ್ನಾಟಕ ಕರಾವಳಿ ಭದ್ರತಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಇನ್ಸ್‍ಪೆಕ್ಟರ್ ವೈ.ಗಂಗಿರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

ಆರೋಪಿಯಾಗಿರುವ ಪೊಲೀಸ್ ಇನ್ಸ್‍ಪೆಕ್ಟರ್ ವಿರುದ್ಧ ಲಂಚ ಆರೋಪದಲ್ಲಿ ಮನೆಯ ಮೇಲೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಸಂಗ್ರಹಿಸಲಾಗಿದ್ದು. ಈ ಆಧಾರದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ತನಿಖಾಧಿಕಾರಿಗಳು ವ್ಯಾಪ್ತಿ ಮೀರಿ ತನಿಖೆ ನಡೆಸಿದ್ದಾರೆ ಎಂದು ತಿಳಿಸಿ ನ್ಯಾಯಪೀಠವು ಪ್ರಕರಣವನ್ನು ರದ್ದುಪಡಿಸಿತು. 

ಶ್ರೀನಿವಾಸ್ ಪ್ರಸಾದ್ ಎಂಬುವರು ತಮ್ಮ ವಾಹನ ಕಳುವಾಗಿರುವ ಸಂಬಂಧ ದೂರು ದಾಖಲಿಸಲು ಬೆಳ್ತಂಗಡಿ ಪೆÇಲೀಸ್ ಠಾಣೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿದ್ದ ಗಂಗಿರೆಡ್ಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು 30 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಈ ಸಂಬಂಧ ಸಂಭಾಷಣೆ ನಡೆಸಿದ್ದ ಧ್ವನಿಯನ್ನು ರೆಕಾಡಿರ್ಂಗ್ ಮಾಡಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 

ವಕೀಲರ ವಾದ ಆಲಿಸಿದ ನ್ಯಾಯಪೀಠವು ದಾಳಿ ನಡೆಸಿ ತನಿಖೆ ಕೈಗೊಳ್ಳಲು ಪೂರ್ವಾನುಮತಿ ಪಡೆದಿರಲಿಲ್ಲ. ಅಲ್ಲದೇ ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧದ ಪ್ರಕರಣದಲ್ಲಿ ಆರೋಪಿ ಕೃಷಿ ಆಧಾಯವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ. ಹೀಗಾಗಿ ಶಿಕ್ಷೆ ರದ್ದುಪಡಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

Similar News