‘ನಮ್ಮ ಕ್ಲಿನಿಕ್’ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹ ತಪಾಸಣೆ: ಸಚಿವ ಸುಧಾಕರ್

‘ನರ್ಸಿಂಗ್ ಸಂಸ್ಥೆಗಳ ಪರಿಶೀಲನೆಗೆ ಸಮಿತಿ ರಚನೆ’

Update: 2022-11-28 13:30 GMT

ಬೆಂಗಳೂರು, ನ. 28: ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ‘ನಮ್ಮ ಕ್ಲಿನಿಕ್’ ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸೋಮವಾರ ನಗರದಲ್ಲಿ ಆರೋಗ್ಯ ಸಿಟಿ ಸಮ್ಮಿಟ್‍ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಸಾಂಕ್ರಾಮಿಕ ರೋಗಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿರ್ವಹಣೆಗೆ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್’ಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

ಕೊಳೆಗೇರಿ, ಬಡ ಜನರು ವಾಸಿಸುವ ಪ್ರದೇಶಗಳಲ್ಲಿ ಇಂತಹ ಕ್ಲಿನಿಕ್ ಆರಂಭಿಸಿ ಜನರಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಈ ಮೂಲಕ ಮಧುಮೇಹ ಸೇರಿದಂತೆ ಅಸಾಂಕ್ರಾಮಿಕ ರೋಗಗಳಿರುವ ಜನರ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಒಟ್ಟು ಮಧುಮೇಹಿಗಳಲ್ಲಿ ಶೇ.75ರಷ್ಟು ಜನರು ಚಿಕಿತ್ಸೆಯನ್ನೆ ಪಡೆಯುತ್ತಿಲ್ಲ. ಆದುದರಿಂದ, 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಮಧುಮೇಹ ಪತ್ತೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು. 

6,500ಕ್ಕೂ ಅಧಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಇವುಗಳ ಮೂಲಕವು ಮಧುಮೇಹ ತಪಾಸಣೆ ಮಾಡಲಾಗುವುದು. 200ಕ್ಕೂ ಅಧಿಕ ನಮ್ಮ ಕ್ಲಿನಿಕ್ ಸಿದ್ಧವಾಗಿದ್ದು, ತಿಂಗಳಾಂತ್ಯದಲ್ಲಿ ಬೇರೆ ಪ್ರದೇಶಗಳಲ್ಲಿ 100 ಹಾಗೂ ಒಂದು ವಾರದ ಬಳಿಕ ಬೆಂಗಳೂರು ನಗರದಲ್ಲಿ ಕ್ಲಿನಿಕ್ ಉದ್ಘಾಟಿಸಲಾಗುವುದು ಎಂದು ಸುಧಾಕರ್ ವಿವರಿಸಿದರು.

30 ವರ್ಷ ವಯಸ್ಸಿನ ಮಧುಮೇಹಿಯೊಬ್ಬರು ಗ್ಯಾಂಗ್ರಿನ್‍ನಿಂದ ಕಾಲಿಗೆ ಹಾನಿ ಮಾಡಿಕೊಂಡಿದ್ದರು. ಆದರೆ ಅವರಿಗೆ ಮಧುಮೇಹ ಇದೆ ಎಂಬುದೇ ಗೊತ್ತಿರಲಿಲ್ಲ. ಇಂತಹ ನಿರ್ಲಕ್ಷ್ಯ, ಜಾಗೃತಿಯ ಕೊರತೆ ಎಲ್ಲೆಡೆ ಕಂಡುಬರುತ್ತಿದೆ. ಪ್ರತಿ ವರ್ಷ ಆರೋಗ್ಯ ತಪಾಸಣೆಯನ್ನು ಕೂಡ ಜನರು ಮಾಡಿಕೊಳ್ಳುವುದಿಲ್ಲ. ಜನರು ವರ್ಷಕ್ಕೊಮ್ಮೆ ಕಡ್ಡಾಯವಾಗಿ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಶೇ.50ರಷ್ಟು ಜನರಿಗೆ ಆರೋಗ್ಯ ತಪಾಸಣೆ: ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಶೇ.50ರಷ್ಟು ಜನರನ್ನು ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಳಪಡಿಸಲಾಗಿದೆ. ಮುಂದಿನ 18 ತಿಂಗಳಲ್ಲಿ ರಾಜ್ಯದ ಶೇ.100ರಷ್ಟು ಜನರಿಗೆ ಆರೋಗ್ಯ ತಪಾಸಣೆ ಮಾಡಿಸಬೇಕು ಎಂಬುದು ನನ್ನ ಗುರಿಯಾಗಿದೆ ಎಂದು ಸುಧಾಕರ್ ತಿಳಿಸಿದರು.
ರಾಜ್ಯದಲ್ಲಿ ಆರಂಭಿಸಿದ ‘ಇ-ಮನಸ್’ ಕಾರ್ಯಕ್ರಮವನ್ನು ಕೇಂದ್ರ ಸರಕಾರ ಮಾದರಿಯಾಗಿಸಿಕೊಂಡು ಹೊಸ ಕಾರ್ಯಕ್ರಮ ಆರಂಭಿಸಿದೆ. ಅನೇಕರಿಗೆ ಮಾನಸಿಕ ಸಮಸ್ಯೆ ಇದೆ ಎಂದೇ ಗೊತ್ತಿರುವುದಿಲ್ಲ. ಕ್ಯಾನ್ಸರ್ ವಿಚಾರದಲ್ಲೂ ಹೀಗೆಯೇ ಆಗುತ್ತಿದೆ. ಕಿದ್ವಾಯಿ ಸಂಸ್ಥೆ ಮೂಲಕ ಕ್ಯಾನ್ಸರ್ ಬಗ್ಗೆ ಹೆಚ್ಚು ಅರಿವು ಮೂಡಿಸಲಾಗುತ್ತಿದೆ. ರೋಗ ಬರುವುದಕ್ಕಿಂತ ಮೊದಲು ರೋಗ ಪೂರ್ವದ ನಿಯಂತ್ರಣ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ ಅವರು ಹೇಳಿದರು.

ಬೆಂಗಳೂರು ನಗರ ಐಟಿ ನಗರವಾಗಿ ಅಭಿವೃದ್ಧಿಯಾಗಿದೆ. ಈಗ ಇದು ಆರೋಗ್ಯ ನಗರವಾಗಿ ಬೆಳೆಯುತ್ತಿದೆ. 1.3 ಕೋಟಿ ಜನಸಂಖ್ಯೆ ಇರುವ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ, ಮಾಲಿನ್ಯ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಎರಡು-ಮೂರು ದಶಕಕ್ಕೆ ಹೋಲಿಸಿದರೆ ಈಗ ಜನರ ಗರಿಷ್ಠ ವಯೋಮಿತಿ ಹೆಚ್ಚಾಗಿದೆ. ಹಿಂದೆ 40-52 ವಯೋಮಿತಿ ಇದ್ದು, ಈಗ 65-67 ಆಗಿದೆ. ವಯೋಮಿತಿ ಹೆಚ್ಚಳದ ಮೂಲಕ ನಾವು ಅಭಿವೃದ್ಧಿ ಸಾಧಿಸಿದ್ದೇವೆ ಎನ್ನಬಹುದು. ಆದರೆ ಎಷ್ಟು ವರ್ಷ ಬದುಕುತ್ತೇವೆ ಎನ್ನುವುದಕ್ಕಿಂತ ಎಷ್ಟು ಆರೋಗ್ಯಕರವಾಗಿ ಬದುಕುತ್ತೇವೆ ಎಂಬುದು ಮುಖ್ಯ ಎಂದು ಸುಧಾಕರ್ ತಿಳಿಸಿದರು.

ಅಭಿವೃದ್ಧಿಶೀಲ ಹಾಗೂ ಹಿಂದುಳಿದ ದೇಶಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚು ದುಷ್ಪರಿಣಾಮ ಬೀರುತ್ತಿವೆ. ಅದರಲ್ಲೂ ಭಾರತದಲ್ಲಿ ಮಧುಮೇಹ ಹೆಚ್ಚು ಜನರನ್ನು ಕಾಡುತ್ತಿದೆ. ಸಂಸ್ಕರಿತ ಸಕ್ಕರೆ ಬಹಳ ಹಿಂದೆ ದೇಶದಲ್ಲಿ ಕಂಡುಬಂದಿತ್ತು. ಮಕ್ಕಳು ಫಾಸ್ಟ್ ಫುಡ್‍ಗೆ ಬೇಗನೆ ಹೊಂದಿಕೊಳ್ಳುತ್ತಿದ್ದಾರೆ. ಮಕ್ಕಳು ಹೊರಗೆ ಆಟವಾಡುವುದು ಕಡಿಮೆಯಾಗಿದೆ. ಹಿಂದಿನ ಜನಾಂಗ ಹೆಚ್ಚು ಆಟ, ಓಡಾಟ ಮಾಡುತ್ತಿದ್ದರು. ಇದರಿಂದಾಗಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಲವಾಗಿದ್ದರು. ಈ ಬಗ್ಗೆ ಹೆಚ್ಚು ಜಾಗೃತಿ ಈಗ ಅಗತ್ಯವಿದೆ ಎಂದು ಅವರು ಹೇಳಿದರು.

ನರ್ಸಿಂಗ್ ಸಂಸ್ಥೆಗಳ ಪರಿಶೀಲನೆ: ನಮ್ಮ ಸರಕಾರದಿಂದ ಒಂದೇ ಒಂದು ನರ್ಸಿಂಗ್-ಜಿಎನ್‍ಎಮ್ ಸಂಸ್ಥೆಗೆ ಪರವಾನಗಿ ನೀಡಿಲ್ಲ. ಆದರೆ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಅಲ್ಲದೆ, ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದಾರೆ. ಹಿಂದಿನ ಸರಕಾರದಲ್ಲಿ ಯಾವುದೇ ಮೂಲಸೌಕರ್ಯವನ್ನು ಪರಿಶೀಲಿಸದೆ ಕೆಲ ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ 850 ನರ್ಸಿಂಗ್ ಕಾಲೇಜುಗಳಿವೆ. ಸರಕಾರದಿಂದ ಸಮಿತಿ ರಚಿಸಿ ಈ ಎಲ್ಲ ಸಂಸ್ಥೆಗಳಲ್ಲಿ ಪರಿಶೀಲನೆ ನಡೆಸಲು ಉದ್ದೇಶಿಸಲಾಗಿದೆ. ಆ ಸಮಿತಿಯಿಂದ ವರದಿ ಪಡೆದು ಕ್ರಮ ವಹಿಸಲಾಗುವುದು ಎಂದರು.

Similar News