‘ಚಿಲುಮೆ’ ಸಂಸ್ಥೆ ಹಗರಣ: ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Update: 2022-11-28 15:57 GMT

ಬೆಂಗಳೂರು, ನ. 28: ಮತದಾರರ ಮಾಹಿತಿ ಕದ್ದ ಆರೋಪ ಹೊತ್ತಿರುವ ‘ಚಿಲುಮೆ’ ಸಂಸ್ಥೆ ಪ್ರಕರಣ ಸಂಬಂಧ ಮತ್ತೋರ್ವನನ್ನು ಹಲಸೂರು ಗೇಟ್ ಠಾಣಾ ಪೊಲೀಸರು ಸೆರೆ ಹಿಡಿದಿದ್ದು, ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. 

ಚಿಲುಮೆ ಸಂಸ್ಥೆಯ ಸಿಬ್ಬಂದಿ ಅನಿಲ್ ಎಂಬಾತ ಬಂಧಿತನಾಗಿದ್ದು, ಈತ ಮಹದೇವಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಆಗಿದ್ದ ಎಂದು ತಿಳಿದು ಬಂದಿದೆ.

ಹಲವು ವರ್ಷಗಳಿಂದ ಪ್ರಕರಣದ ರೂವಾರಿ ರವಿಕುಮಾರ್ ಜೊತೆ ಗುರುತಿಸಿಕೊಂಡಿದ್ದ. ನೌಕರರ ನೇಮಕ ಹಾಗೂ ಲಾಜಿಸ್ಟಿಕ್ ವರ್ಕ್ ಸೇರಿದಂತೆ ಎಲ್ಲವೂ ಅನಿಲ್ ಅಧೀನದಲ್ಲೇ ನಡೆಯುತ್ತಿದ್ದವು ಎಂದು ಹೇಳಲಾಗುತ್ತಿದೆ.
ಪ್ರಕರಣ ಬೆಳಕಿಗೆ ಬಂದ ನಂತರ ಈತ ನಾಪತ್ತೆಯಾಗಿದ್ದು, ಈ ಸಂಬಂಧ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಹೊರವಲಯದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ, ಮತದಾರರ ವೈಯಕ್ತಿಕ ಮಾಹಿತಿ ಕಳವು ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಇದುವರೆಗೂ 12 ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣ ಪ್ರಮುಖ ಆರೋಪಿ ರವಿಕುಮಾರ್ ಆಪ್ತನಾಗಿದ್ದ ಅನಿಲ್, ಮಹದೇವಪುರದಲ್ಲಿ ಚಿಲುಮೆ ಕಚೇರಿಯ ಉಸ್ತುವಾರಿ ವಹಿಸಿಕೊಂಡಿರುವ ಮಾಹಿತಿ ಇದ್ದು, ತನಿಖೆ ಕೈಗೊಳ್ಳಲಾಗಿದೆ ಎಂದರು.

ಮತ್ತೊಂದೆಡೆ, ಪೊಲೀಸ್ ಕಸ್ಟಡಿಯಲ್ಲಿರುವ ರವಿಕುಮಾರ್ ಹಾಗೂ ಚಿಲುಮೆ ಸಂಸ್ಥೆ ಬ್ಯಾಂಕ್ ಖಾತೆಗಳ ಹಣಕಾಸಿನ ವ್ಯವಹಾರಗಳ ಬಗ್ಗೆ ಪರಿಶೀಲಿಸಲಾಗುತ್ತಿದೆ. ಆರೋಪಿಗಳ ಖಾತೆಯಿಂದ ಬಿಬಿಎಂಪಿ ಅಧಿಕಾರಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಂದಾಯವಾಗಿದೆ ಎಂಬುದರ ಬಗ್ಗೆಯೂ ತನಿಖೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಕೋರ್ಟ್‍ಗೆ ಮೊರೆ ಹೋದ ಬಿಬಿಎಂಪಿ ಸಿಬ್ಬಂದಿ: ಮತದಾರರ ಮಾಹಿತಿ ಕದ್ದ ಚಿಲುಮೆ ಸಂಸ್ಥೆ ಹಗರಣದಲ್ಲಿ ನಮ್ಮನ್ನು ಗುರಿಯಾಗಿಸಿಕೊಂಡಿರುವ ತನಿಖಾ ಸಂಸ್ಥೆಗಳು, ಮಾನಸಿಕ ಹಿಂಸೆ ನೀಡುತ್ತಿವೆ ಎಂದು ಬಿಬಿಎಂಪಿ ಸಿಬ್ಬಂದಿ, ಕೋರ್ಟ್  ಮೊರೆ ಹೋಗಿದ್ದಾರೆ.

ಸೋಮವಾರ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬರೋಬ್ಬರಿ 150ಕ್ಕೂ ಅಧಿಕ ಬಿಬಿಎಂಪಿ ಸಿಬ್ಬಂದಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.

ಬಿಬಿಎಂಪಿ ಕ್ಷೇತ್ರವಾರು ಕಂದಾಯ ಅಧಿಕಾರಿಗಳು ಸೇರಿದಂತೆ ಹಲವು ಬಿಬಿಎಂಪಿ ಸಿಬ್ಬಂದಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕರಣದ ತನಿಖೆ, ವಿಚಾರಣೆ ನೆಪದಲ್ಲಿ ನಮಗೆ ಮಾನಸಿಕ ಹಿಂಸೆ ನೀಡಲಾಗುತ್ತಿರುವುದನ್ನು ನಿಲ್ಲಿಸಿ ಎಂದು ಕೋರಿದ್ದಾರೆ.

Similar News