ನಾಳೆ ಸುಪ್ರೀಂಕೋರ್ಟ್‍ನಲ್ಲಿ ಗಡಿ ವಿವಾದ ಅರ್ಜಿ ವಿಚಾರಣೆ; ರಾಜ್ಯದ ಪರ ಸಮರ್ಥ ವಾದ ನಡೆಸುವ ಭರವಸೆ: ಬೊಮ್ಮಾಯಿ

Update: 2022-11-29 17:23 GMT

ಹೊಸದಿಲ್ಲಿ, ನ.29: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ  ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ಹೊಸದಿಲ್ಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ  ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಕುಲ್ ರೋಹಟಗಿ  ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ ಎಂದರು.

ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ.  ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರ ಸರಕಾರ ಹಾಕಿರುವ ನಿರ್ವಹಣೆ (ಮೇಂಟೈನಬಲಿಟಿ) ಕುರಿತಾಗಿ ವಿಚಾರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ. ಮಹಾರಾಷ್ಟ್ರದ ನಾಯಕರು, ನಾವು ಈ ವಿಚಾರದಲ್ಲಿ ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು

ಕರ್ನಾಟಕಕ್ಕೆ ಸೇರಲು ಗ್ರಾಮಸ್ಥರ ನಿರ್ಧಾರ: ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಜತ್ ತಾಲೂಕಿನ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು  ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ತಿಳಿಸಿದರು.

ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಮಹಾರಾಷ್ಟ್ರ ಗೃಹ ಇಲಾಖೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

Similar News