"ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನ ಅವೈಜ್ಞಾನಿಕ"

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಶಾಸಕ ರಘುಪತಿ ಭಟ್ ಮನವಿ

Update: 2022-12-01 14:30 GMT

ಉಡುಪಿ, ಡಿ.1: ಸುರತ್ಕಲ್ ಟೋಲ್‌ಗೇಟ್‌ನ್ನು ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್‌ ಶುಲ್ಕದೊಂದಿಗೆ ವಿಲೀನ ಮಾಡಿರುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್, ಇಂದು ಹೊಸದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಅದರಿಂಟಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮಕೈಗೊಳ್ಳುವಂತೆ ವಿನಂತಿಸಿದರು.

ಮನವಿ ಸ್ವೀಕರಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಈ ವಿಷಯದ ಕುರಿತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಗಳೊಂದಿಗೆ ಡಿ.5ರಂದು ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದರು ಎಂದು ಶಾಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ - ಚಿಕ್ಕಮಗಳೂರು ಸಂಸದೆ ಹಾಗೂ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗುಜರಾತ್ ಚುನಾವಣಾ ಪ್ರಚಾರದಲ್ಲಿರುವುದರಿಂದ ಅವರ ಸೂಚನೆಯಂತೆ ಸಚಿವರ ಹೊಸದಿಲ್ಲಿ ಕಚೇರಿ ಅಧಿಕಾರಿಗಳು ಹಾಗೂ ಆಪ್ತ ಕಾರ್ಯದರ್ಶಿಯೊಂದಿಗೆ ಈ ವಿಷಯದ ಕುರಿತು ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿರುವುದಾಗಿ ರಘುಪತಿ ಭಟ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಸಚಿವರ ಭೇಟಿಯ ಬಳಿಕ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಭೇಟಿಯಾಗಿ ಸುರತ್ಕಲ್ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದರಿಂದ ಸ್ಥಳೀಯವಾಗಿ ಉಂಟಾಗುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿ 2 ಟೋಲ್ ಶುಲ್ಕವನ್ನು ಒಂದೇ ಟೋಲ್ ಮೇಲೆ ಹೇರುವುದರಿಂದ ಉಡುಪಿ ಜಿಲ್ಲೆಯ ವಾಹನ ಸವಾರರು ದುಬಾರಿ ಶುಲ್ಕ ಪಾವತಿಸಬೇಕಾಗುತ್ತದೆ. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಅಥವಾ ಇತರ ವಾಹನಗಳು ಮುಲ್ಕಿಯಿಂದ ಕಿನ್ನಿಗೋಳಿ ಮುಖಾಂತರ ಹೋಗುತ್ತಿದ್ದರಿಂದ ಸುರತ್ಕಲ್ ಟೋಲ್ ಪಾವತಿಸುವ ಅವಶ್ಯಕತೆ ಇರಲಿಲ್ಲ. ಆದರೆ ಈಗ ಸುರತ್ಕಲ್ ಟೋಲ್ ಶುಲ್ಕ ಹೆಜಮಾಡಿ ಟೋಲ್ ಜತೆ ವಿಲೀನದಿಂದ ಮುಲ್ಕಿಯಿಂದ ಕಿನ್ನಿಗೋಳಿ ಮೂಲಕ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಟ್ಯಾಕ್ಸಿ ಸೇರಿದಂತೆ ಇತರ ವಾಹನ ಸವಾರರು ಹೆಜಮಾಡಿ ಟೋಲ್ ನಲ್ಲಿ ಹೆಚ್ಚುವರಿ ಶುಲ್ಕ ಪಾವತಿಸಬೇಕಾಗುತ್ತದೆ. 

ಅಲ್ಲದೆ ಸುರತ್ಕಲ್ ಟೋಲ್‌ನಲ್ಲಿ ಸ್ಥಳೀಯ ವಾಣಿಜ್ಯ ಉದ್ದೇಶಕ್ಕೆ ಬಳಸುವ ವಾಹನಗಳಿಗೆ ಶೇ.50ರಷ್ಟು ರಿಯಾಯಿತಿ ಇತ್ತು. ಅದನ್ನು ಈ ಟೋಲ್‌ನಲ್ಲಿ ವಿಲೀನ ಮಾಡುವಾಗ ಪರಿಗಣಿಸದೆ ಇರುವ ಬಗ್ಗೆಯೂ ಮನವಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಡಿ.5ರಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ನಡೆಸುವ ಸಭೆಯಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವವರೆಗೆ ಟೋಲ್ ದರ ಹೆಚ್ಚಳ ಮಾಡದಂತೆ ಶಾಸಕ ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರ ಆಪ್ತ ಕಾರ್ಯದರ್ಶಿ ಸಾಕತ್‌ ಸಿಂಗ್ ರಾಣಾವತ್, ಹೆಚ್ಚುವರಿ ಆಪ್ತ ಕಾರ್ಯದರ್ಶಿ ಮಂಜುನಾಥ್ ಗೌಡ ಹಾಗೂ ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಉಪಸ್ಥಿತರಿದ್ದರು.

Similar News