ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಭೆ

Update: 2022-12-01 16:13 GMT

ಕುಂದಾಪುರ, ಡಿ.1: ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ 2022-23ನೇ ಸಾಲಿನ ರಕ್ಷಕ- ಶಿಕ್ಷಕ ಸಭೆಯು ಡಿ.1ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸದಾಶಿವ ರಾಮಪ್ಪ ಗವರೋಜಿ, ವಿದ್ಯಾರ್ಥಿಗಳು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಸೈಬರ್ ಅಪರಾಧಗಳಲ್ಲಿ ತೊಡಗುವುದರಿಂದ ಮುಂದೆ ಜೀವನದಲ್ಲಿ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಸರಿಯಾದ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಮಟ್ಟದ ತರಬೇತುದಾರ ಆಝಾದ್ ಮೊಹಮ್ಮದ್, ಮಕ್ಕಳ ಸರ್ವತೋಮುಖ ಬೆಳವಣಿಗೆಯ ಪ್ರತಿ ಹಂತದಲ್ಲಾಗುವ ಬದಲಾವಣೆ ಮತ್ತು ಅದರ ಬಗ್ಗೆ ಪೋಷಕರು ವಹಿಸಬೇಕಾದ ಕಾಳಜಿ ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಹಾಗೂ ಶಿಕ್ಷಕ ರಕ್ಷಕ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ 2022-24ನೇ ಸಾಲಿಗೆ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಭೌತಶಾಸ್ತ್ರ ಉಪನ್ಯಾಸಕ ಸಿದ್ದೀಕ್ ಅಕ್ಬರ್ ಪದವಿ ಪೂರ್ವ ಹಂತದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿವಿಧ ಸರಕಾರಿ ಹಾಗೂ ಖಾಸಗಿ ವಿದ್ಯಾರ್ಥಿ ವೇತನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.  ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರಹ್ಮಾನ್ ಅಧ್ಯಕ್ಷತೆ ವಹಿಸಿದ್ದರು.  ಸಲಹಾ ಮಂಡಳಿ ಸದಸ್ಯ ಅಬುಶೇಖ್ ಸಾಹೇಬ್ ಉಪಸ್ಥಿತರಿದ್ದರು. ಉಪನ್ಯಾಸಕಿ ದೀಪ ಸ್ವಾಗತಿಸಿದರು. ಶ್ವೇತಾ ವಂದಿಸಿದರು. ರಜನಿ ಕಾರ್ಯಕ್ರಮ ನಿರೂಪಿಸಿದರು.

Similar News