ಜೆಇ ಲಸಿಕೀಕರಣ ಸುರಕ್ಷಿತ: ದ.ಕ. ಜಿಲ್ಲಾಧಿಕಾರಿ ರವಿಕುಮಾರ್

Update: 2022-12-05 13:52 GMT

ಮಂಗಳೂರು, ಡಿ.5: ಮೆದುಳು ಜ್ವರ ತಡೆಗಟ್ಟಲು ಡಿ.25ರ ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜಪಾನೀಸ್ ಎನ್ಸೆಫಾಲಿಟಿಸ್ (ಜೆಇ) ಲಸಿಕೀಕರಣವು ಅತ್ಯಂತ ಸುರಕ್ಷಿತ, ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ ಎಂದು  ದ.ಕ.  ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.

ಅವರು ಇಂದು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,  ವಿವಿಧ ಇಲಾಖೆಗಳು ಹಾಗೂ  ಲೇಡಿಹಿಲ್‌ನ ಸಂತ ಅಲೋಶಿಯಸ್ ಶಾಲೆಯ ಸಂಯುಕ್ತಾಶ್ರಯದಲ್ಲಿ ನಗರದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೆಇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2006ರಲ್ಲಿ ಈ ಲಸಿಕೆಯನ್ನು ಸಂಶೋಧಿಸಲಾಗಿದ್ದು, ಅತ್ಯಂತ ಸುರಕ್ಷಿತವಾಗಿದೆ ಅದನ್ನು ಪಡೆಯದೆ ಇದ್ದಲ್ಲೀ ಶೇ.30ರಷ್ಟು ಗಂಭೀರ ಖಾಯಿಲೆಗಳು ಬರುವ ಸಾಧ್ಯತೆಗಳಿವೆ. ಯಾವುದೇ ಅನುಮಾನಗಳಿಗೆ ಆಸ್ಪದ ನೀಡದೇ ಮುಂದಿನ ಮೂರು ವಾರಗಳಲ್ಲಿ ನಡೆಯುವ ಅಭಿಯಾನದಲ್ಲಿ ಲಸಿಕೆ ಪಡೆಯಬೇಕು. ಅದಕ್ಕಾಗಿ ಆರೋಗ್ಯ ಇಲಾಖೆಯಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್  ಮಾತನಾಡಿ, ಕೊರೋನ ನಂತರ ಈ ಲಸಿಕೆ ನೀಡಲಾಗುತ್ತಿದೆ. ಪೋಷಕರು ಯಾವುದೇ ರೀತಿಯ ತಪ್ಪುಕಲ್ಪನೆ, ಗ್ರಹಿಕೆಗಳಿಗೆ ಅವಕಾಶ ನೀಡದೇ ಪ್ರತಿಯೊಂದು ಅರ್ಹ ಮಗುವಿಗೂ ಲಸಿಕೆ ಕೊಡಿಸಬೇಕು. ಆರೋಗ್ಯ ಕೇಂದ್ರಗಳಿಗಿಂತ ಶಾಲೆಗಳಲ್ಲಿಯೇ ಲಸಿಕೆ ನೀಡಿದರೆ ಉತ್ತಮ ಎಂದರು.

ಈ ಅಭಿಯಾನಕ್ಕೆ ಜಿಲ್ಲೆಯಲ್ಲಿ 3500 ಕೇಂದ್ರಗಳನ್ನು ರಚಿಸಲಾಗಿದ್ದು, 4.73 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗುವುದು ಎಂದರು.

ಸೇಂಟ್ ಅಲೋಶಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಡಾ. ಪ್ರೆಸಿಲ್ಲ ಡಿಸೋಜಾ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಮಾತನಾಡಿದರು.

ಡಬ್ಲ್ಯೂಎಚ್‌ಓ ಸರ್ವೆಲೆನ್ಸ್ ಅಧಿಕಾರಿ ಅನಂತೇಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಧಾಕರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್ ಬಿ.ವಿ., ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಹಾಗೂ ಇತರರು ಭಾಗವಹಿಸಿದ್ದರು.‌

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳೆಪಾಡಿ ಸ್ವಾಗತಿಸಿ, ನಿರೂಪಿಸಿದರು.

Similar News