ಉಡುಪಿ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ: ಡಿಸಿ ಕೂರ್ಮಾರಾವ್

Update: 2022-12-05 14:33 GMT

ಉಡುಪಿ, ಡಿ.5: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. 

ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಚುನಾವಣಾ ಆಯೋಗದ ಮಾರ್ಗಸೂಚಿಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆಗೆ ಆದ್ಯತೆ ನೀಡಲಾಗುತ್ತಿದೆ. ಕಾಲೇಜುಗಳಲ್ಲಿ ವಿಶೇಷ ನೋಂದಣಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಮತದಾರರ ಪಟ್ಟಿಯ ಪರಿಶೀಲನೆ ಸಂದರ್ಭದಲ್ಲಿ ತಾನೂ ಸಹ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಸರುಗಳನ್ನು ಕೈಬಿಡುವಾಗ ಅದಕ್ಕೆ ಪೂರಕವಾದ ಎಲ್ಲಾ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಮಹಜರು ಮಾಡಲಾಗಿದೆ ಎಂದರು.

ನವೆಂಬರ್ 9ರಿಂದ ಆರಂಭಗೊಂಡಿರುವ ವಿಶೇಷ ಪರಿಷ್ಕರಣೆ ಕುರಿತಂತೆ ಪ್ರತೀ ವಾರದ ಮತದಾರರ ಪಟ್ಟಿಯಲ್ಲಿನ ಸೇರ್ಪಡೆ, ತಿದ್ದುಪಡಿ, ಬದಲಾವಣೆ, ತೆಗೆದು ಹಾಕುವ ಕುರಿತ ವಿವರವಾದ ಅಂಕಿ ಅಂಶಗಳನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ಪರಿಶೀಲನೆಗೆ ನೀಡಲಾಗುತ್ತಿದ್ದು, ಕ್ಷೇತ್ರ ಮಟ್ಟದ ಎಲ್ಲಾ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳು ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿದ್ದಲ್ಲಿ ಮುಕ್ತವಾಗಿ ಪರಿಶೀಲನೆ ನಡೆಸಲಾಗುವುದು ಎಂದರು.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿನ ತಮ್ಮ ಸಂದೇಹಗಳನ್ನು ಬಗೆಹರಿಸಿ ಕೊಳ್ಳಲು ಉಚಿತ ಸಹಾಯವಾಣಿ ಸಂಖ್ಯೆ 1950ನ್ನು ಸಂಪರ್ಕಿಸಬಹುದು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು,  ರಾಜಕೀಯ ಪಕ್ಷಗಳ ವತಿಯಿಂದ ಬೂತ್ ಮಟ್ಟದ ಸಹಾಯಕರ ಪಟ್ಟಿಯನ್ನು ಶೀಘ್ರವಾಗಿ ನೀಡಿದಲ್ಲಿ ಅವರ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಹಾಗೂ ಅವರು ಬಿಎಲ್‌ಓ ಗಳೊಂದಿಗೆ ತಮ್ಮ ವ್ಯಾಪ್ತಿಯ ಮತದಾರರ ಪಟ್ಟಿಯ ಸಮಸ್ಯೆಗಳ ಬಗ್ಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗಲಿದೆ ಎಂದರು.  

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜೆಡಿಎಸ್‌ನ ಜಯರಾಮ ಆಚಾರ್ಯ, ಕಾಂಗ್ರೆಸ್‌ನ ಹಬೀಬ್ ಅಲಿ, ಸಂತೋಷ್ ಕುಲಾಲ್, ನವೀನ್‌ಚಂದ್ರ ಎಸ್ ಸುವರ್ಣ ಉಪಸ್ಥಿತರಿದ್ದರು.

Similar News