ಕಾಲಮಿತಿಯೊಳಗೆ ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿ: ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ

Update: 2022-12-06 14:58 GMT

ಉಡುಪಿ, ಡಿ.6: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೊಂಡಿರುವ ಯೋಜನೆ ಗಳು, ಅಭಿವೃದ್ಧಿ ಕಾರ್ಯಗಳು ಹಾಗೂ ಕಾರ್ಯಕ್ರಮಗಳನ್ನು ನಿಗದಿತ ಕಾಲಾವಧಿಯೊಳಗೆ ಸಂಪೂರ್ಣ ಅನುದಾನ ಬಳಕೆಯೊಂದಿಗೆ ಅನುಷ್ಠಾನ ಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶ ನೀಡಿದರು.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. 

ಸರಕಾರದ ಜನಪರ ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಮತ್ತಿತರ ಅಭಿವೃದ್ಧಿ ಕಾರ್ಯಗಳನ್ನು ರೂಪಿಸಿರುವುದರೊಂದಿಗೆ ಅನುದಾನವನ್ನು ಸಹ ಒದಗಿಸಿದೆ. ಸಂಬಂಧಪಟ್ಟ ಇಲಾಖೆಗಳು ತಮಗೆ ನೀಡಿರುವ ಭೌತಿಕ, ಆರ್ಥಿಕ ಗುರಿಯನ್ನು, ಪ್ರಾಕೃತಿಕ ವಿಕೋಪದಡಿ ನೀಡಿರುವ ಮೂಲ ಸೌಕರ್ಯಗಳ ಅಭಿವೃದ್ಧಿ ಅನುದಾನವನ್ನು ಬಳಕೆಯೊಂದಿಗೆ ಕಾಮಗಾರಿಗಳನ್ನು  ಕಾಲಮಿತಿ ಯೊಳಗೆ ಸಾಧಿಸಬೇಕು ಎಂದರು.

ಕಂದಾಯ ಇಲಾಖೆ ಅಡಿಯಲ್ಲಿ ವಿವಿಧ ಸವಲತ್ತುಗಳು, ಭೂದಾಖಲೆಗಳ ಬದಲಾವಣೆ, ಸರ್ವೇ ಕಾರ್ಯಗಳ ಅರ್ಜಿ, ಜಮೀನು ಕೋರಿ ಬರುವ ಅರ್ಜಿ, ಅಕ್ರಮ ಸಕ್ರಮ  ಸೇರಿದಂತೆ ಬರುವ ವಿವಿಧ ಅರ್ಜಿಗಳನ್ನು ನಿಯಮಾನುಸಾರ ವಿಳಂಬಲ್ಲದೇ ವಿಲೇವಾರಿ ಮಾಡಬೇಕೆಂದು ಸೂಚನೆ ನೀಡಿದ ಅವರು, ಅಕ್ರಮ ಒತ್ತುವರಿಯಿಂದ ತೆರವು ಗೊಳಿಸಿದ ಭೂಮಿಯನ್ನು ಇತರೆ ಇಲಾಖೆಗಳಿಗೆ ನಿರ್ವಹಣೆಗೆ ವಹಿಸುವುದರೊಂದಿಗೆ ಜಮೀನುಗಳನ್ನು ಕಾಯ್ದಿರಿಸಬೇಕು ಎಂದರು.

ಕಾಲುಸಂಕ ನಿರ್ಮಾಣಕ್ಕೆ ಆದ್ಯತೆ: ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಯಿಂದಾಗಿ ಮಳೆಗಾಲದಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುವುದರಿಂದ ಜನರು ಅವುಗಳನ್ನು ದಾಟಲು ಬಳಸಲು ಅನುಕೂಲವಾಗುವಂತೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಅಗತ್ಯಕ್ಕನುಗುಣವಾಗಿ ಕಾಲುಸಂಕಗಳ ನಿರ್ಮಾಣವನ್ನು ಆದ್ಯತೆಯ ಮೇಲೆ ಕೈಗೊಳ್ಳ ಬೇಕೆಂದು ಲೋಕೋಪಯೋಗಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಅಧಿಕಾರಿಗಳಿಗೆ ಮನೋಜ್ ಜೈನ್ ಸೂಚನೆ ನೀಡಿದರು.

ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೊಂದಾಯಿಸಿ ಕೊಂಡು ಅದರ ಉಪಯೋಗ ಪಡೆದು ಕೊಳ್ಳಲು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ರೋಗಿಗಳು ಬಂದಾಗ ಆರೋಗ್ಯ ಮಿತ್ರ ಸಿಬ್ಬಂದಿಗಳು ಅವರಿಗೆ  ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ದಿನದ ೨೪ ಗಂಟೆಯೂ ನೀಡಿ ಸಹಕರಿಸಬೇಕು. ಇದಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ  ಕಾಯ್ದಿರಿಸಿರುವ ಬೆಡ್‌ಗಳು ಉಪಯುಕ್ತವಾಗುವಂತೆ ಮೇಲ್ವಿಚಾರಣೆ ನಡೆಸಬೇಕು. ಅಲ್ಲದೇ ಜನಸಾಮಾನ್ಯರಿಗೆ ಅನುಕೂಲವಾಗಲು  ಸಹಾಯವಾಣಿಯನ್ನು ತೆರೆಯಬೇಕೆಂದು ಉಸ್ತುವಾರಿ ಕಾರ್ಯ ದರ್ಶಿ ಸಲಹೆ ನೀಡಿದರು.

ಶುದ್ಧ ಕುಡಿಯುವ ನೀರು ಒದಗಿಸಿ: ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ  ಜಲ ಜೀವನ್ ಮಿಷನ್ ಯೋಜನೆಯಡಿ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ಪೂರ್ಣ ಗೊಳಿಸಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರಿಗೆ ಸೂಚನೆ ನೀಡಿದರು.

ನಗರ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು  ಕಲ್ಪಿಸುವ ಅಮೃತ್ ಹಾಗೂ ನಗರೋತ್ಥಾನ ಯೋಜನೆ ಗಳ ಅನುದಾನಗಳ ಸಮರ್ಪಕ ಬಳಕೆ ಯೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಿ ಜನಸಾಮಾನ್ಯರಿಗೆ ಈ ಯೋಜನೆಗಳ ಪ್ರಯೋಜನ ಸಿಗುವಂತೆ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Similar News