ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ; ತಾಯಿ ಸಹಿತ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ

Update: 2022-12-07 13:07 GMT

ಮಂಗಳೂರು, ಡಿ.7: ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಮೂವರು ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-೨ (ಪೊಕ್ಸೋ) ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ.

ಕೋಟೆಕಾರಿನ ಡೆರ್ವಿನ್ ಡಿಸೋಜಾ, ಸಂತ್ರಸ್ತೆ ಬಾಲಕಿಯ ತಾಯಿ ಮತ್ತು ಕಲ್ಲಾಪುವಿನ ಮೆಲ್ವಿನ್ ಡಿಸೋಜಾ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

ಪ್ರಕರಣದ ವಿವರ: ಪೈಂಟರ್ ವೃತ್ತಿಯ ಡೆರ್ವಿನ್ ಡಿಸೋಜ ಮಹಿಳೆಯೊಬ್ಬರ ಸ್ನೇಹ ಬೆಳೆಸಿಕೊಂಡು ಆಕೆಯ ಮನೆಗೆ ಹೋಗುತ್ತಿದ್ದ ಅಲ್ಲದೆ ಆಕೆಗೆ ಆರ್ಥಿಕ ಸಹಾಯವನ್ನೂ ಮಾಡುತ್ತಿದ್ದ. ಬಳಿಕ ಮಹಿಳೆಯ ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆಯೂ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಎನ್ನಲಾಗಿದೆ.

ಇದನ್ನು ತಿಳಿದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಆರೋಪಿ ಡೆರ್ವಿನ್ ಡಿಸೋಜ ಬಾಲಕಿಯನ್ನು ತನ್ನ ಸ್ನೇಹಿತ ಮೆಲ್ವಿನ್‌ನ ಮನೆಗೆ ಕರೆದೊಯ್ದು ಅಲ್ಲಿ ಅಕ್ರಮವಾಗಿ ಕೂಡಿ ಹಾಕಿದ್ದ. ಬಾಲಕಿ ಮನೆಯಿಂದ ಹೊರಗೆ ಹೋಗದಂತೆ ನೋಡಿಕೊಂಡಿದ್ದನಲ್ಲದೆ ಅಲ್ಲಿಯೂ ಲೈಂಗಿಕ ದೌರ್ಜನ್ಯವೆಸಗಿದ್ದ.

ಈ ಬಗ್ಗೆ 2016ರ ಡಿಸೆಂಬರ್‌ನಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೆ ಸಾರ್ವಜನಿಕರು ಮಾಹಿತಿ ನೀಡಿದ್ದರು. ಅದರಂತೆ ರಕ್ಷಣಾ ಘಟಕದವರು ಬಾಲಕಿಯನ್ನು ರಕ್ಷಿಸಿದ್ದರು. ಉಳ್ಳಾಲ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ-2 (ಪೊಕ್ಸೋ) ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ಅವರು ಆರೋಪಿಗಳನ್ನು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿ ಡೆರ್ವಿನ್ ಡಿಸೋಜಗೆ ಪೋಕ್ಸೋ ಕಲಂ 6ರಡಿ 15 ವರ್ಷ ಕಠಿಣ ಸಜೆ, 50,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ವರ್ಷ ಹೆಚ್ಚುವರಿ ಸಜೆ, ಐಪಿಸಿ ಕಲಂ 366ರಂತೆ 7 ವರ್ಷ ಕಠಿಣ ಸಜೆ, 25,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 6 ತಿಂಗಳ ಸಜೆ, ಐಪಿಸಿ  ಕಲಂ 343ರಂತೆ 2 ವರ್ಷ ಕಠಿಣ ಸಜೆ ವಿಧಿಸಿದ್ದಾರೆ.

ಕೃತ್ಯಕ್ಕೆ ಸಹಕರಿಸಿದ ಬಾಲಕಿಯ ತಾಯಿಗೆ ಪೋಕ್ಸೋ ಕಲಂ 17ರಡಿ 14 ವರ್ಷ ಕಠಿಣ ಸಜೆ, 25,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 3 ತಿಂಗಳು ಸಜೆ ವಿಧಿಸಿದ್ದಾರೆ. ಮತ್ತೋರ್ವ ಆರೋಪಿ ಮೆಲ್ವಿನ್‌ಗೆ ಪೋಕ್ಸೋ ಕಲಂ 21ರಡಿ 6 ತಿಂಗಳ ಸಜೆ, 30,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಆರೋಪಿಗಳು 5 ಲ.ರೂ. ಪರಿಹಾರವನ್ನು ಸಂತ್ರಸ್ತೆಗೆ ಪರಿಹಾರ ನೀಡಬೇಕು. ಅದರಲ್ಲಿ 1 ಲ.ರೂ.ಗಳನ್ನು ತಕ್ಷಣ ನೀಡಬೇಕು. ಉಳಿದ 4 ಲ.ರೂ.ವನ್ನು ಆಕೆಯ ಹೆಸರಿನ ರಾಷ್ಟ್ರೀಕೃತ ಬ್ಯಾಂಕ್ ಖಾತೆಗೆ ಜಮೆ ಮಾಡಿ ವಿದ್ಯಾಭ್ಯಾಸ ಮುಂದುವರಿಸಲು ಸಂದರ್ಭಾನುಸಾರ ವಿದ್‌ಡ್ರಾ ಮಾಡಲು ಅವಕಾಶ ನೀಡಬೇಕು ಎಂದು ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದರು.

ಉಳ್ಳಾಲ ಠಾಣೆಯ ಇನ್ಸ್‌ಪೆಕ್ಟರ್‌ಗಳಾದ ಸವಿತ್ರಾ ತೇಜಾ ಮತ್ತು ಕೆ.ಆರ್. ಗೋಪಿಕೃಷ್ಣ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ. ವಾದಿಸಿದ್ದರು. 

Similar News