ಮಂಗಳೂರು: ಅಧಿಕ ಸಂಖ್ಯೆಯ ಮತದಾರರನ್ನು ಪಟ್ಟಿಯಲ್ಲಿ ನೋಂದಾಯಿಸಲು ಪೊನ್ನುರಾಜ್ ಸೂಚನೆ

Update: 2022-12-07 14:58 GMT

ಮಂಗಳೂರು, ಡಿ.7: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳು ಹಾಗೂ ತಹಶೀಲ್ದಾರರು ಅಧಿಕ ಸಂಖ್ಯೆಯ ಮತದಾರರನ್ನು ನೋಂದಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮತದಾರರ ಪಟ್ಟಿಯ ವೀಕ್ಷಕರೂ ಆಗಿರುವ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಪೊನ್ನುರಾಜ್ ಸೂಚನೆ ನೀಡಿದ್ದಾರೆ.

ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂತಿಮ ಮತದಾರ ಪಟ್ಟಿಯು 2023ರ ಜನವರಿ 5ರಂದು ಪ್ರಕಟವಾಗಲಿದೆ. ಪರಿಷ್ಕರಣೆ ಸಂದರ್ಭ ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆಯುವ ಸಂದರ್ಭ ಎಚ್ಚರಿಕೆ ವಹಿಸಬೇಕು. ಮತದಾರರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರವನ್ನು ಪಡೆಯಬೇಕು. ಸ್ಥಳಾಂತರಗೊಂಡ ಮತದಾರರ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪಟ್ಟಿಯನ್ನು ತೆಗೆದುಕೊಂಡು ಅವರ ಜನ್ಮ ದಿನಾಂಕವನ್ನು ಪರಿಶೀಲಿಸಿ ಅರ್ಹರಿದ್ದರೆ ಮತದಾರರ ಪಟ್ಟಿಗೆ ಅವರನ್ನು ಸೇರ್ಪಡೆ ಮಾಡುವ ಕೆಲಸವನ್ನು ಮಾಡಬೇಕು. ಈ ಬಗ್ಗೆಯೂ ಸ್ವೀಪ್ ಸಮಿತಿಯ ವತಿಯಿಂದ ಹಲವು ಚಟುವಟಿಕೆಗಳನ್ನು ಕೈಗೊಂಡು ವ್ಯಾಪಕವಾಗಿ ಜಾಗೃತಿ ಮೂಡಿಸುವ ಮೂಲಕ ಮತದಾರರ ಪಟ್ಟಿಗೆ ಹೆಸರುಗಳು ಹೆಚ್ಚು ದಾಖಲಾಗುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ವೇದಿಕೆಯಲ್ಲಿ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮದನ್  ಮೋಹನ್ ಹಾಗೂ ಗಿರೀಶ್ ನಂದನ್ ಉಪಸ್ಥಿತರಿದ್ದರು.

Similar News