‘ಗಡಿ ವಿವಾದ’ ಬಿಜೆಪಿ ಸರಕಾರಗಳಿಂದಲೇ ಉದ್ವಿಗ್ನ ಸ್ಥಿತಿ ನಿರ್ಮಾಣ: ಸಿದ್ದರಾಮಯ್ಯ ಆಕ್ರೋಶ

''ಸಂಧಾನದ ಮೂಲಕ ಪರಿಹರಿಸಬೇಕಿದ್ದ ವಿವಾದವನ್ನು ಬೆಳೆಯಲು ಬಿಟ್ಟು ಚಂದ ನೋಡುತ್ತಾ ಕೂತಿದೆ...''

Update: 2022-12-08 16:25 GMT

ಬೆಂಗಳೂರು, ಡಿ.8: ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಎರಡೂ ಕಡೆ ಬಿಜೆಪಿಯದೇ ಸರಕಾರವಿದೆ. ಈ ಎರಡೂ ಸರಕಾರಗಳು ಮಾತನಾಡಿಕೊಂಡು ಬೇಕಂತಲೇ ಉದ್ವಿಗ್ನ ಸ್ಥಿತಿ ನಿರ್ಮಾಣ ಮಾಡುತ್ತಿರಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮಹಾಜನ್ ಆಯೋಗದ ವರದಿ ಪ್ರಕಾರ ಈಗಾಗಲೇ ಇತ್ಯರ್ಥ ಆಗಿದೆ. ಆದರೆ, ಮಹಾರಾಷ್ಟ್ರದವರು ರಾಜಕೀಯ ಕಾರಣಕ್ಕಾಗಿ ಇದನ್ನು ಜೀವಂತವಾಗಿಟ್ಟುಕೊಂಡು ಕೆದಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಈಗ ಅಲ್ಲಿನ ಸರಕಾರ ಬೆಳಗಾವಿ ತಮಗೆ ಸೇರಬೇಕು ಎಂದು ಸುಪ್ರೀಂಕೋರ್ಟ್‍ನಲ್ಲಿ ಮನವಿ ಸಲ್ಲಿಸಿದೆ. ಇದನ್ನು ನಾವಿದ್ದಾಗಲೂ ಮನವಿ ಹಾಕಿದ್ದರು. ಆಗ ನಾವು ಈ ಮನವಿ ವಿಚಾರಣೆಗೆ ಅರ್ಹವಾದುದ್ದಲ್ಲ ಎಂದು ವಾದ ಮಂಡಿಸಿದ್ದೆವು. ಈಗ ಸರಕಾರ ಒಳ್ಳೆ ವಕೀಲರನ್ನು ಇಟ್ಟು ವಾದ ಮಾಡಿಸುವ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು. 

ರಾಜ್ಯದ ಬಸ್ಸುಗಳಿಗೆ ಕಲ್ಲು ಹೋಡೆದರೆ, ಪುಂಡಾಟ ಮಾಡಿದರೆ ಇಲ್ಲಿನ ಮುಖ್ಯಮಂತ್ರಿ, ಪ್ರಧಾನಿ ಬಳಿ ಹೋಗಿ ಮಾತನಾಡಬೇಕು ಮತ್ತು ಅವರಿಂದ ಇಂಥಾ ಪುಂಡಾಟಗಳನ್ನು ಮಾಡದಂತೆ ಹೇಳಿಸಬೇಕು. ಪ್ರಕರಣ ಸುಪ್ರೀಂಕೋರ್ಟ್ ನಲ್ಲಿ ಇರುವಾಗ ಅದನ್ನು ಈ ರೀತಿ ವಿವಾದ ಯಾಕೆ ಮಾಡಬೇಕು? ಅವರು ಕೋರ್ಟ್ ನಲ್ಲಿ ಹೋರಾಟ ಮಾಡಲಿ, ನಾವು ಮಾಡೋಣ ಎಂದು ಸಿದ್ದರಾಮಯ್ಯ ಹೇಳಿದರು. 

ಕರ್ನಾಟಕದ ನೆಲ, ಜಲ, ಭಾಷೆ ಈ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ನಮ್ಮದು. ಬೆಳಗಾವಿಯ ಒಂದೇ ಒಂದು ಇಂಚು ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಎರಡೂ ಕಡೆ ಬಿಜೆಪಿ ಸರಕಾರವೇ ಇರುವುದರಿಂದ ಬಸವರಾಜ ಬೊಮ್ಮಾಯಿ ಪ್ರಧಾನಿ, ಗೃಹ ಸಚಿವರು ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಹಾರಾಷ್ಟ್ರ ಸರಕಾರಕ್ಕೆ ಪುಂಡಾಟಿಕೆ ಮಾಡದಂತೆ ತಿಳಿಸಬೇಕು ಎಂದು ಅವರು ಆಗ್ರಹಿಸಿದರು.

ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರಕಾರ ಚಂದ ನೋಡುತ್ತಾ ಕೂತಿದೆ. ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಬಸವರಾಜ ಬೊಮ್ಮಾಯಿ ಆ ರಾಜ್ಯದ ಮುಖ್ಯಮಂತ್ರಿಯನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು. ‘ಡಬಲ್ ಎಂಜಿನ್ ಸರಕಾರ’ ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರಕಾರದ ನೆರವನ್ನು ಪಡೆಯಬೇಕು ಎಂದು ಅವರು ಹೇಳಿದರು. 

Full View

Similar News