'ಗಡಿ ವಿವಾದ' ಡಿ.14, 15ರಂದು ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ: ಸಿಎಂ ಬೊಮ್ಮಾಯಿ
Update: 2022-12-10 07:18 GMT
ಬೆಂಗಳೂರು, ಡಿ. 10: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿ.14 ಅಥವಾ 15 ರಂದು ಸಭೆ ನಡೆಯಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು.
ಸರ್ವ ಪಕ್ಷದ ಸಭೆ: ಸರ್ವ ಪಕ್ಷದ ಸಭೆ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಾಗಿದೆ. ಸಭೆ ನಿಗದಿಯಾದ ಕೂಡಲೇ ತಿಳಿಸಲಾಗುವುದು ಎಂದು ತಿಳಿಸಿದರು.