ಡಿ.19ರಿಂದ ಚಳಿಗಾಲದ ಅಧಿವೇಶನ; ಸಚಿವರು, ಶಾಸಕರ ಹಾಜರಾತಿ ಕಡ್ಡಾಯ: ಸ್ಪೀಕರ್ ಕಾಗೇರಿ

Update: 2022-12-12 13:34 GMT

ಬೆಳಗಾವಿ, ಡಿ.12: ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದುದರಿಂದ, ಜನರ ಭಾವನೆಗಳಿಗೆ ಸ್ಪಂದಿಸಿ, ಸಚಿವರು, ಶಾಸಕರು ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚಿಸಿದ್ದಾರೆ.

ಸೋಮವಾರ ಬೆಳಗಾವಿಯ ಸುರ್ವಣ ವಿಧಾನಸೌಧದಲ್ಲಿ ಡಿ.19ರಿಂದ ಆರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ಸಿದ್ಧತೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಡಿ.19ರಿಂದ 30ರ ವರೆಗೆ ನಡೆಯಲಿರುವ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಯಾವುದೇ ರೀತಿಯ ಲೋಪ-ದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು. 

ಸದನದ ಕಾರ್ಯ ಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ. ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ. ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿಬರ್ಂಧ ಇರುವುದಿಲ್ಲ. ಆದುದರಿಂದ, ಪ್ರಶ್ನೋತ್ತರ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ ಎಂದು ಸ್ಪೀಕರ್ ತಿಳಿಸಿದರು.

ಕಲಾಪ ವೀಕ್ಷಣೆಗೆ ಅವಕಾಶ: ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ. 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ. ಇದಲ್ಲದೆ ನಾಲ್ಕು ಹೊಸ ವಿಧೇಯಕಗಳು ಬಂದಿವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ ಎಂದು ಅವರು ಮಾಹಿತಿ ನೀಡಿದರು.

ಮೊದಲ ದಿನ ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು. ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು. ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಕಟ್ಟಡದಲ್ಲಿ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ ಎಂದು ಅವರು ತಿಳಿಸಿದರು. 

ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದು ಸ್ಪೀಕರ್ ಹೇಳಿದರು.

ಇದಕ್ಕೂ ಮುನ್ನ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ನಗರ ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ವಿಧಾನಸಭೆಯ ಕಾರ್ಯದರ್ಶಿ ಎಂ.ವಿಶಾಲಾಕ್ಷಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

‘ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು. ಜನರ ಅಪೇಕ್ಷೆಯಂತೆ ಉತ್ತಮ ರೀತಿಯಲ್ಲಿ ಅಧಿವೇಶನ ನಡೆಸುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮನ್ನು ನಾವು ಭಾವನಾತ್ಮಕವಾಗಿ ತೊಡಗಿಸಿಕೊಳ್ಳಬೇಕಿದೆ. ಆದುದರಿಂದ, ಎಲ್ಲರೂ ಸಹಕರಿಸಬೇಕು’

-ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪೀಕರ್

Similar News