ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

Update: 2022-12-16 15:58 GMT
ಉಡುಪಿ, ಡಿ.16: ವಕೀಲರ ರಕ್ಷಣಾ ಕಾಯ್ದೆಯನ್ನು ಶೀಘ್ರವೇ ಸರಕಾರ ಜಾರಿಗೆ ತರಬೇಕು ಎಂದು ಆಗ್ರಹಿಸಿ ಇಂದು ಉಡುಪಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನ್ಯಾಯಾಲಯದ ಸಂಕೀರ್ಣದ ಮುಂಭಾಗ ಸೇರಿದ ನೂರಾರು ವಕೀಲರು ಶೀಘ್ರ ಕಾಯಿದೆ ಜಾರಿಗೊಳಿಸುವಂತೆ ಒತ್ತಾಯಿಸಿದರು. ಇತ್ತೀಚಿನ ದಿನಗಳಲ್ಲಿ ವಕೀಲರಿಗೆ ರಕ್ಷಣೆಯ ಅಗತ್ಯ ಹಿಂದೆಂದಿಗಿಂತ ಹೆಚ್ಚು ಇದೆ. ಸಮಾಜಕ್ಕೆ ನ್ಯಾಯ ಒದಗಿಸುವ ವೃತ್ತಿ ಮಾಡುವ ವಕೀಲರಿಗೆ ರಕ್ಷಣೆ ಮುಖ್ಯ. ಇತ್ತೀಚಿನ ವರ್ಷಗಳಲ್ಲಿ ವಕೀಲರ ಮೇಲೆ ಹಲ್ಲೆಯಂತಹ ಪ್ರಕರಣಗಳು ಹೆಚ್ಚುತ್ತಿವೆ. ಹಿರಿಯ ಕಿರಿಯ ವಕೀಲರಿಗೆ ತಮ್ಮ ಕರ್ತವ್ಯದ ಸಮಯದಲ್ಲಿ ರಕ್ಷಣೆ ಬಹಳ ಅಗತ್ಯ. ಹೀಗಾಗಿ ಸರಕಾರ ಮುಂದಿನ ಅಧಿವೇಶನದಲ್ಲೇ ಈ ಕಾಯಿದೆಯನ್ನು ಜಾರಿಗೆ ತರಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಉಡುಪಿ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಹಿರಿಯ ಕಿರಿಯ ವಕೀಲರು ಉಪಸ್ಥಿತರಿದ್ದರು.

Similar News