×
Ad

ವಾರಾಹಿ ಎಡದಂಡೆ ವ್ಯಾಪ್ತಿ ಕಾಮಗಾರಿ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ: ಗ್ರಾಮ ವಾಸ್ತವ್ಯದಲ್ಲಿ ಉಡುಪಿ ಡಿಸಿ ಸೂಚನೆ

Update: 2022-12-17 19:38 IST

ಉಡುಪಿ, ಡಿ.17: ಹಾರ್ದಳ್ಳಿ-ಮಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಹಾದು ಹೋಗಿರುವ ವಾರಾಹಿ ಎಡದಂಡೆ ಕಾಮಗಾರಿಯಿಂದ ಸ್ಥಳೀಯರಿಗೆ ಸಂಪರ್ಕ ರಸ್ತೆ ಸಮಸ್ಯೆ ಸೇರಿದಂತೆ ಆಗುತ್ತಿರುವ ವಿವಿಧ ಸಮಸ್ಯೆಗಳ ಕುರಿತಂತೆ  ತಕ್ಷಣವೇ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ.

ಶನಿವಾರ ಬಿದ್ಕಲ್‌ಕಟ್ಟೆಯ ಕೆ.ಪಿ.ಎಸ್.ಶಾಲೆಯಲ್ಲಿ ನಡೆದ ಹಾರ್ದಳ್ಳಿ- ಮಂಡಳ್ಳಿ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. 

ವಾರಾಹಿ ಎಡದಂಡೆ ಕಾಮಗಾರಿಯ ಕಾರಣ ಗ್ರಾಮದಲ್ಲಿ ಹಲವೆಡೆ ಸಂಪರ್ಕ ರಸ್ತೆಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ವಾರಾಹಿ ಯೋಜನೆಯ ಇಂಜಿನಿಯರ್‌ಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಜಿಲ್ಲಾಧಿಕಾರಿ ಬಳಿ ದೂರು ಸಲ್ಲಿಸಿ ಮನವಿ ಅರ್ಪಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ವಾರಾಹಿ ಯೋಜನೆಯ ಕಿರಿಯ ಇಂಜಿನಿಯರ್ ಬಳಿ ಈ ಬಗ್ಗೆ ವಿವರ ಕೇಳಿದ ಜಿಲ್ಲಾಧಿಕಾರಿಗಳು, ತಾವು ಇಂದು ಇಡೀ ದಿನ ಇದೇ ಗ್ರಾಮದಲ್ಲಿ ವಾಸ್ಯವ್ಯ ಇರಲಿದ್ದು, ಸ್ಥಳಕ್ಕೆ ವಾರಾಹಿ ಯೋಜನೆಯ ಹಿರಿಯ ಇಂಜಿನಿಯರ್‌ಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ ಕೂಡಲೇ ಹಾಜರಾಗುವಂತೆ ಹಾಗೂ ಈ ಸಮಸ್ಯೆ ಬಗ್ಗೆ ತಕ್ಷಣದಲ್ಲಿಯೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. 

ವಾರಾಹಿ ಎಡದಂಡೆ ಕಾಮಗಾರಿಗೆ ಭೂಮಿ ನೀಡಿರುವ ಸಾರ್ವಜನಿಕರ ಕಂದಾಯ ದಾಖಲೆಗಳಲ್ಲಿರುವ ಸಮಸ್ಯೆ ಗಳ ಬಗ್ಗೆ ಮನವಿ ಆಲಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕುಂದಾಪುರ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗೆ ಸೂಚನೆಗಳನ್ನು ನೀಡಿದರು.

ಕಂದಾಯ ದಾಖಲೆಗಳ ಯಾವುದೇ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟ ದಾಖಲೆಗಳೊಂದಿಗೆ ಸೋಮವಾರ ತಮ್ಮ ಕಚೇರಿಗೆ ಬಂದು ಸರಿ ಪಡಿಸಿಕೊಳ್ಳುವಂತೆ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ತಿಳಿಸಿದರು.

ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮಗಳಲ್ಲಿ ಗ್ರಾಮ ಒನ್ ಸೆಂಟರ್ ಗಳನ್ನು ತೆರೆಯಲಾಗಿದ್ದು, ಇದರಿಂದಾಗಿ ತಾಲೂಕು ಮತ್ತು ಜಿಲ್ಲಾ ಕಚೇರಿಯಲ್ಲಿ ದೊರೆಯುವ ವಿವಿಧ ಇಲಾಖೆಗಳ ಹಲವು ದಾಖಲೆ ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರು ಗ್ರಾಮದಲ್ಲಿಯೇ ಪಡೆಯಬಹುದಾಗಿದೆ. ಆಯುಷ್ಮಾನ್ ಕಾರ್ಡ್ ಯೋಜನೆಯ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಬಿಪಿಎಲ್ ಕಾರ್ಡ್‌ಗೆ 5 ಲಕ್ಷ ಮತ್ತು ಎಪಿಎಲ್‌ಗೆ 1.5 ಲಕ್ಷ ರೂ.ವರೆಗೆ ನೊಂದಾಯಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಸಾರ್ವಜನಿಕರು ಇವುಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.

ಗ್ರಾಮದ ಬೀದಿದೀಪ, ರಸ್ತೆ ನಿರ್ಮಾಣ ಮತ್ತು ದುರಸ್ಥಿ, ಅಪಾಯಕಾರಿ ವಿದ್ಯುತ್ ತಂತಿ ಬದಲಾವಣೆ, 94ಸಿ ಸಮಸ್ಯೆ ಸೇರಿದಂತೆ 20ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಮತ್ತು ವಿಲೇವಾರಿ ನಡೆಯಿತು.

ಜೆಇ ಲಸಿಕೆ ನೀಡಿ: 1ರಿಂದ 15 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಮೆದುಳು ಜ್ವರ ಲಸಿಕೆಯನ್ನು ಕೊಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ತೆಂಗಿನ ಮರ ಹತ್ತುವ ಕಾರ್ಮಿಕರಿಗೆ ತೋಟಗಾರಿಕೆ ಇಲಾಖೆ ವತಿಯಿಂದ ವಿಮೆ ಸೌಲಭ್ಯ, ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ಸೌಲಭ್ಯವಿದ್ದು, ಇದರ ಸದುಪಯೋಗ ಪಡೆದು ಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ, ಜಾನುವಾರುಗಳಿಗೆ ಚರ್ಮಗಂಟು ಖಾಯಿಲೆಗೆ ಲಸಿಕೆ ನೀಡಲು ಬಂದಾಗ ಅಗತ್ಯ ಸಹಕಾರ ನೀಡುವಂತೆ ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ.ಶಂಕರ್ ಶೆಟ್ಟಿ ಗ್ರಾಮಸ್ಥರಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ 18 ಮಂದಿಗೆ 94ಸಿ ಹಕ್ಕುಪತ್ರ ಹಾಗೂ ೨೬ ಜನರಿಗೆ ಪಿಂಚಣಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಾರ್ದಳ್ಳಿ-ಮಂಡಳ್ಳಿ ಗ್ರಾಪಂ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷೆ ರೇಖಾ ಮೊಗವೀರ, ಭೂದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಕಾರ್ಮಿಕ ಅಧಿಕಾರಿ ಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮೊಹಮದ್ ಇಸಾಕ್, ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು. 

ರೈತರು ಕೆವೈಸಿ ಪೂರ್ಣಗೊಳಿಸಿ

ಕಾರ್ಯಕ್ರಮದಲ್ಲಿ ಇಲಾಖಾ ಮಾಹಿತಿಗಳ ಬಗ್ಗೆ ತಿಳಿಸಿದ ಕೃಷಿ ಇಲಾಖೆ  ಜಂಟಿ ನಿರ್ದೇಶಕ ಕೆಂಪೇಗೌಡ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ 1.45 ಲಕ್ಷ ರೈತರು ನೊಂದಣಿ ಮಾಡಿದ್ದು, 1.12 ಲಕ್ಷ ರೈತರು ಮಾತ್ರ ಕೆವೈಸಿ ಪೂರ್ಣ ಗೊಳಿಸಿದ್ದಾರೆ. ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಬಾಕಿ ಉಳಿದ ರೈತರು ಕೂಡಲೇ ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಖಾತೆಗೆ ಹಣ ಜಮೆ ಆಗುವುದಿಲ್ಲ ಎಂದರು.

ರೈತರು ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿ ಮಾಡಿಸಿದಲ್ಲಿ ಸುಲಭವಾಗಿ ಸೌಲಭ್ಯ ಪಡೆಯಬಹುದಾಗಿದೆ. ಜಿಲ್ಲೆಯ ಒಟ್ಟು 2.9 ಲಕ್ಷ ರೈತರಲ್ಲಿ ಇದುವರೆಗೆ 1.65 ಲಕ್ಷ ಮಂದಿ ಮಾತ್ರ ನೊಂದಣಿ ಮಾಡಿಸಿದ್ದಾರೆ ಎಂದರು.

Similar News