ಶಂಕರನಾರಾಯಣ: ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ, ಟಿಪ್ಪರ್ ವಶಕ್ಕೆ
ಕುಂದಾಪುರ: ತಾಲೂಕಿನ ಶಂಕರನಾರಾಯಣ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಮಂಗಳವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖಾಧಿಕಾರಿ ಗಳು ಕಾರ್ಯಾಚರಣೆ ನಡೆಸಿ 2 ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಶಂಕರನಾರಾಯಣ ವ್ಯಾಪ್ತಿಯಲ್ಲಿ ಹಲವೆಡೆ ವಾರಾಹಿ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಬಂದ ದೂರಿನಂತೆ ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು ಮಾರ್ಗದರ್ಶನದಲ್ಲಿ ಬೆಳ್ಳಂಬೆಳಿಗ್ಗೆ ಭೂವಿಜ್ಞಾನಿ ಸಂಧ್ಯಾ ಅವರು ಶಂಕರನಾರಾಯಣ ಗ್ರಾಮದ ಕೈಯಾಣಿ ಎಂಬಲ್ಲಿ ಕಾರ್ಯಾಚರಣೆ ನಡೆಸಿ ಮರಳು ದಕ್ಕೆಯಲ್ಲಿ ಮರಳು ತುಂಬಿ ನಿಂತಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಶಂಕರನಾರಾಯಣ-ಹಾಲಾಡಿ ರಸ್ತೆಯಲ್ಲಿ ಪರವಾನಿಗೆ ರಹಿತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಒಂದು ಟಿಪ್ಪರ್ನ್ನು ವಶಕ್ಕೆ ಪಡೆಯಲಾಗಿದೆ.
ಕೈಯಾಣಿ ಪರಿಸರದಲ್ಲಿನ ಅನಧಿಕೃತ ಮರಳು ದಕ್ಕೆಗೆ ದಾಳಿಯಾಗುತ್ತಿದ್ದಂತೆ, ಶಂಕರನಾರಾಯಣ ವ್ಯಾಪ್ತಿಯ ಭರತ್ಕಲ್, ಕ್ರೊಡಬೈಲೂರು ಹಾಗೂ ಮಚ್ಚಟ್ಟು ಗ್ರಾಮದ ಹೆಮ್ಮಣ್ಣು, ಕಳಿನಜೆಡ್ಡು ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ರಸ್ತೆಯನ್ನು ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದ್ದು, ಅಂತಹ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಲಾಗುವುದು ಹಾಗೂ ಅನಧಿಕೃತ ಮರಳುಗಾರಿಕೆಗೆ ಬಳಸುವ ದೋಣಿಗಳು ವಾರಾಹಿ ನದಿಯಲ್ಲಿ ಅಲ್ಲಲ್ಲಿ ಕಂಡುಬಂದಿರುವ ಬಗ್ಗೆ ಸಾರ್ವಜನಿಕ ದೂರುಗಳು ಹೆಚ್ಚಿದ್ದು ಈ ಬಗ್ಗೆ ವಶಕ್ಕೆ ಪಡೆದು ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಭೂವಿಜ್ಞಾನಿ ಸಂಧ್ಯಾ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಅನಧಿಕೃತ ಮರಳು ಸಾಗಾಣಿಕೆಗೆ ಬಳಸುತ್ತಿದ್ದ 2 ಲಾರಿಗಳನ್ನು 20 ಮೆಟ್ರಿಕ್ ಟನ್ ಮರಳು ಶಂಕರನಾರಾಯಣ ಪೊಲೀಸ್ ಠಾಣೆ ಸುಪರ್ದಿಗೆ ನೀಡಿದ್ದಾರೆ.