ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ರಜತೋತ್ಸವ ಸಮಿತಿ ರಚನೆ
ಶರೀಫ್ ಕಾರ್ಕಳ ಸಂಚಾಲಕ, ಜಯಕರ ಸುವರ್ಣ ಪ್ರ.ಕಾರ್ಯದರ್ಶಿ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಜತ ಮಹೋತ್ಸವದ ಅಂಗವಾಗಿ ಇಡೀ ವರ್ಷ 25 ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲು ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ನಿರ್ಧರಿಸಿದೆ.
ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಸಮಿತಿಯೊಂದನ್ನು ಸಂಘ ರಚಿಸಿದ್ದು ಇದಕ್ಕೆ ಹಿರಿಯ ವರದಿಗಾರ ಮುಹಮ್ಮದ್ ಶರೀಫ್ ಕಾರ್ಕಳ ಅವರನ್ನು ಸಂಚಾಲಕರನ್ನಾಗಿ ಆಯ್ಕೆ ಮಾಡಲಾಗಿದೆ. ದೂರದರ್ಶನದ ಹಿರಿಯ ವರದಿಗಾರ ಜಯಕರ ಸುವರ್ಣ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುತ್ತಾರೆ
ರಜತ ಮಹೋತ್ಸವದ ಅಂಗವಾಗಿ ಜನವರಿ ತಿಂಗಳಿನಿಂದ ಡಿಸೆಂಬರ್ ವರೆಗೆ ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ಪತ್ರಿಕಾ ರಂಗಕ್ಕೆ ಸಂಬಂಧಪಟ್ಟಂತೆ ಕಾರ್ಯಾಗಾರಗಳು, ವಿವಿಧ ಕ್ಷೇತ್ರಗಳಲ್ಲಿ ಅಹರ್ನಿಶಿ ದುಡಿಯುತ್ತಿರುವ ಪತ್ರಕರ್ತರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಸಮಿತಿ ಹಮ್ಮಿಕೊಳ್ಳಲಿದೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ತುರ್ತು ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸದಸ್ಯರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ. ಒಂದು ವರ್ಷದ ಅವಧಿಯಲ್ಲಿ ಕ್ರೀಡಾಕೂಟಗಳು, ಸಾಂಸ್ಕೃತಿಕ ಕಾರ್ಯಕ್ರಮ, ಪತ್ರಿಕಾ ಸಮ್ಮೇಳನ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ವ್ಯಕ್ತಿಗಳ ಜೊತೆ ಸಂವಾದ ಕಾರ್ಯಕ್ರಮ ಜನಪ್ರತಿನಿಧಿಗಳ ಜೊತೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಚರ್ಚಾಕೂಟಗಳು ನಡೆಯಲಿದೆ.
ಶೈಕ್ಷಣಿಕ ಸಂಸ್ಥೆಗಳ ಸಹಯೋಗದ ಜೊತೆ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸುವ ಕಾರ್ಯಾಗಾರ, ಛಾಯಾಚಿತ್ರ ಮತ್ತು ವೀಡಿಯೋ ತರಬೇತಿ ಆಯೋಜಿಸುವ ಉದ್ದೇಶವಿದೆ. ಪತ್ರಿಕಾ ಛಾಯಾಚಿತ್ರ ಪ್ರದರ್ಶನ, ಸಾಕ್ಷ್ಯಚಿತ್ರ ನಿರ್ಮಾಣ ಮತ್ತು ಪ್ರದರ್ಶನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಇದಕ್ಕಾಗಿ ರಜತಮಹೋತ್ಸವ ಸಮಿತಿಯೂ ಸೇರಿದಂತೆ ವಿವಿಧ ಸಮಿತಿ ಗಳನ್ನು ರಚಿಸಲಾಗಿದ್ದು, ಮುಂದಿನ ಒಂದು ವರ್ಷಗಳ ಅವಧಿಯ ಎಲ್ಲಾ ಕಾರ್ಯಕ್ರಮಗಳಿಗೆ ಸಾರ್ವಜನಿಕರ ಸಹಕಾರವನ್ನು ಸಂಘ ಕೋರಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.