ಮೈಸೂರು: ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Update: 2022-12-27 12:12 GMT

ಮೈಸೂರು, ಡಿ.27: ಪ್ರಧಾನಿ ನರೇಂದ್ರ ಮೋದಿ ಅವರ ಕುಟುಂಬಸ್ಥರಿದ್ದ ಕಾರು ಅಪಘಾತವಾದ ಘಟನೆ ತಾಲೂಕಿನ ಕಡಕೊಳ ಎಂಬಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ ಮೋದಿ ಅವರಿದ್ದ ಕಾರು ಇಲ್ಲಿನ ಕಡಕೊಳ ಬಳಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಪ್ರಹ್ಲಾದ್ ದಾಮೋದರ್ ಮೋದಿ, ಅವರ ಮಗ, ಸೊಸೆ ಹಾಗೂ ಮೊಮ್ಮಗನೊಂದಿಗೆ ಮೈಸೂರು ಕಡೆಯಿಂದ ಬಂಡೀಪುರದ ಕಡೆಗೆ ತೆರಳುತ್ತಿದ್ದಾಗ ಕಡಕೊಳದ ಬಳಿ ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಿಂದ ಸಣ್ಣಪುಟ್ಟ ಗಾಯಗಳಾಗಿದ್ದು, ಮೈಸೂರು ನಗರದ ಜೆ.ಎಸ್.ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋದಿ ಸಹೋದರ ಅವರ ಮೊಮ್ಮಗ ಮೇನತ್ ಮೇಹಲ್ ಮೋದಿ ಅವರಿಗೆ ಎಡಗಾಲು ಮುರಿದಿದೆ ಎಂದು ತಿಳಿದುಬಂದಿದ್ದು, ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. 

ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್  ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಮೈಸೂರು ದಕ್ಷಿಣ ವಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Similar News