ಕೋಲಾರ ಕ್ಷೇತ್ರದಿಂದ ಹಿಂದೆ ಸರಿಯಲಿದ್ದಾರೆಯೇ ಸಿದ್ದರಾಮಯ್ಯ?

Update: 2023-06-27 10:57 GMT

ಕೋಲಾರ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ. ಸದ್ಯ, ಟಿಕೆಟ್‌ ವಿಚಾರವಾಗಿ ದಿಲ್ಲಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಚರ್ಚೆ ನಡೆಸಿದ್ದು, ಸಿದ್ದರಾಮಯ್ಯ ಕೋಲಾರ ಸ್ಪರ್ಧೆಯಿಂದ ಹಿಂದೆ ಸರಿಯಲಿದ್ದಾರೆ ಎನ್ನಲಾಗಿದೆ. 

ಮೂಲಗಳ ಪ್ರಕಾರ ಕೋಲಾರದಲ್ಲಿ ಸಿದ್ದರಾಮಯ್ಯ ಪರ ಅಲೆ ಇಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಸಿದ್ದರಾಮಯ್ಯರಿಗೆ ಸಲಹೆ ನೀಡಿದ್ದಾರೆಂದು ಹೇಳಲಾಗಿದೆ. ಅದಾಗ್ಯೂ, ಕಾಂಗ್ರೆಸ್‌ ಅಧಿಕೃತ ಮೂಲಗಳು ಈ ಸುದ್ದಿಯನ್ನು ಖಚಿತಪಡಿಸಿಲ್ಲ. 

2018 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸೋತು, ಬಾದಾಮಿಯಲ್ಲಿ ಕಡಿಮೆ ಅಂತರದಲ್ಲಿ ಗೆದ್ದಿದ್ದ ಸಿದ್ದರಾಮಯ್ಯ ಈ ಬಾರಿ ಮತ್ತೆ ಬಾದಾಮಿಯಿಂದ ಕಣಕ್ಕೆ ಇಳಿಯಲಾರರು ಎಂಬ ಚರ್ಚೆ ಈಗಾಗಲೇ ರಾಜಕೀಯ ವಲಯದಲ್ಲಿದ್ದು, ಕೋಲಾರದಿಂದಲೂ ಹಿಂದೆ ಸರಿಯುವ ಬಗ್ಗೆ ಮಾತುಕತೆ ನಡೆಯುತ್ತಿದ್ದಂತೆ, ವರುಣಾ ಕ್ಷೇತ್ರದ ಕಡೆಗೆ ರಾಜ್ಯ ರಾಜಕೀಯ ವಲಯದ ದೃಷ್ಟಿ ನೆಟ್ಟಿದೆ. ಈಗಾಗಲೇ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆಗಾಗಿ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿರುವುದರಿಂದ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Similar News