'ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು' ಎಂಬ ವಾಟ್ಸಾಪ್‌ ಸಂದೇಶದ ಕುರಿತು ನಟ ಕಿಶೋರ್‌ ಹೇಳಿದ್ದೇನು?

Update: 2023-01-02 07:13 GMT

ಬೆಂಗಳೂರು,ಜ.2: 'ಕಾಂತಾರ' ದೈವ ಅವಮಾನಿಸಿದ ಯುವಕನೋರ್ವ ರಕ್ತಕಾರಿ ಸಾವನ್ನಪ್ಪಿದ್ದಾನೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಈ ಬಗ್ಗೆ ಕಾಂತಾರ ಸಿನೆಮಾದ ನಟ ಕಿಶೋರ್ (actorkishore) ಪ್ರತಿಕ್ರಿಯಿಸಿದ್ದಾರೆ. 

ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ''ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿಕೆ ಇರಲಿ, ಮೂಢನಂಬಿಕೆ ಬೇಡ'' ಎಂದು ಹೇಳಿದ್ದಾರೆ. 

''ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೋ ವಾಟ್ಸ್​​ಆ್ಯಪ್​​ನಲ್ಲಿ ವೈರಲ್ ಆಗಿದೆ. ಆ ಸಿನೆಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೋ, ದೆವ್ವವೋ ಒಂದು ಸಾಧನವಷ್ಟೆ. ಸಿನೆಮಾವಾಗಲಿ ಪುರಾಣವಾಗಲಿ'' ಎಂದು ತಿಳಿಸಿದ್ದಾರೆ. 

''ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ...'' ಎಂದು ಕಿಶೋರ್ ಬರೆದುಕೊಂಡಿದ್ದಾರೆ.

Similar News