ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ 13 ಕಾಂಗ್ರೆಸ್ ನಾಯಕರಿಗೆ ಕೋರ್ಟ್‍ನಿಂದ ಸಮನ್ಸ್

Update: 2023-01-07 14:11 GMT

ಬೆಂಗಳೂರು: ಆದಾಯ ತೆರಿಗೆ ಇಲಾಖೆ(ಐಟಿ) ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದ ಕರ್ನಾಟಕ ಕಾಂಗ್ರೆಸ್‍ನ 13 ಹಿರಿಯ ನಾಯಕರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. 

ಕೊರೋನ ಮಾರ್ಗಸೂಚಿ ಉಲ್ಲಂಘಿಸಿ ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.9ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಕಾಂಗ್ರೆಸ್ ನಾಯಕರ ನಿವಾಸದ ಮೇಲೆ ಐಟಿ ದಾಳಿ ಖಂಡಿಸಿ, ಕೋವಿಡ್ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಬೆಂಗಳೂರಿನ ಐಟಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಕೊರೋನ ಮಾರ್ಗಸೂಚಿ ನಿಯಮವಿದ್ದರೂ, ಇದನ್ನು ಗಾಳಿಗೆ ತೂರಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಈ ಕೇಸ್‍ಗೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ನೀಡಿದೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಯು.ಟಿ.ಖಾದರ್, ವೀರಪ್ಪ ಮೊಯ್ಲಿ, ಕೆ.ಜೆ.ಜಾರ್ಜ್, ರಿಝ್ವಾನ್ ಅರ್ಷದ್, ಟಿ.ಬಿ.ಜಯಚಂದ್ರ, ಎಂ.ನಾರಾಯಣ ಸ್ವಾಮಿ, ಪರಮೇಶ್ವರ್ ನಾಯ್ಕ್, ಸಲೀಂ ಅಹ್ಮದ್, ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ನಲಪಾಡ್ ಸೇರಿದಂತೆ 13 ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.

Similar News