ಶಿವಮೊಗ್ಗ | ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್: ಯುವ ಉದ್ಯಮಿ ಮೃತ್ಯು

Update: 2023-01-08 04:07 GMT

ಶಿವಮೊಗ್ಗ, ಜ.8: ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ  ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ.

ಇಲ್ಲಿನ ಖ್ಯಾತ ಉದ್ಯಮಿ, ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕರಾಗಿದ್ದ ಭೂಪಾಳಂ ಎಸ್. ಶರತ್ (39) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶರತ್ ಅವರ ಪುತ್ರ ಸಂಚಿತ್ (12) ಗಂಭೀರ ಗಾಯಗೊಂಡಿದ್ದು ಆತನನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯತ್ ಕಚೇರಿ ಎದುರು ಇರುವ ಭೂಪಾಳಂ ಕುಟುಂಬದವರ ಮನೆ‌ಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ದಟ್ಟ ಹೊಗೆ ಆವರಿಸಿದ ಕೂಡಲೇ ಭೂಪಾಳಂ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಮತ್ತೆ ಮನೆಯೊಳಗೆ ತೆರಳಿದ್ದ ಶರತ್, ಹೊಗೆಯ ಮಧ್ಯೆ ಸಿಲುಕಿ ಪ್ರಜ್ಞೆತಪ್ಪಿ ಬಿದ್ದಿದ್ದರು.

ಘಟನೆಯಲ್ಲಿ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಜೊತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಬಿದ್ದಿದ್ದ ಶರತ್ ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Similar News