ಜ.16ರಂದು 'ನಾ ನಾಯಕಿ' ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಆಗಮನ: ಡಿ.ಕೆ. ಶಿವಕುಮಾರ್

Update: 2023-01-09 11:18 GMT

ಬೆಂಗಳೂರು: 'ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ 'ನಾ ನಾಯಕಿ' ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ  ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು,  ' ಜ.16ರಂದು ಅರಮನೆ ಮೈದಾನದಲ್ಲಿ ಮಹಿಳೆಯರ 'ನಾ ನಾಯಕಿ' ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಈ ಸಮಾವೇಶದಲ್ಲಿ ಪಂಚಾಯತ್, ಸಹಕಾರ ಸಂಘಗಳಲ್ಲಿ ಸ್ಪರ್ಧೆ ಮಾಡಿದ ಮಹಿಳಾ ನಾಯಕಿಯರು ಭಾಗವಹಿಸುತ್ತಾರೆ ಎಂದು ತಿಳಿಸಿದರು.

'ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಬೂತ್, ಪಂಚಾಯತ್ ಗಳಿಂದ ಕನಿಷ್ಠ 3-10 ಹೆಣ್ಣು ಮಕ್ಕಳು ಈ ಸಮಾವೇಶಕ್ಕೆ ಆಗಮಿಸಬೇಕು ಎಂದು ಕರೆ ನೀಡುತ್ತಿದ್ದೇನೆ. ಹೆಣ್ಣು ಸಮಾಜದ ಕಣ್ಣು ಅವರು ಒಂದು ಶಕ್ತಿಯಾಗಿದ್ದು, ಅವರ ಸಬಲೀಕರಣಕ್ಕೆ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಸಮಾವೇಶಕ್ಕೆ ರಾಷ್ಟ್ರೀಯ ನಾಯಕರನ್ನು ಆಹ್ವಾನಿಸಿದ್ದೇವೆ. ಈಗಾಗಲೇ ಸಾವಿರಾರು ಸಲಹೆಗಳು ಬಂದಿದ್ದು, ಇವುಗಳನ್ನು ಒಂದು ಸಮಿತಿ ಪರಿಶೀಲನೆ ನಡೆಸುತ್ತಿವೆ. ಈ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಗಮಿಸಲಿದ್ದಾರೆ. ಪ್ರಿಯಾಂಕಾ ಅವರು ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ನೀಡುವ ಭರವಸೆಗಳನ್ನು ಘೋಷಣೆ ಮಾಡಲಿದ್ದಾರೆ. ಮಹಿಳೆಯರಿಗೆ ರಾಜಕೀಯವಾಗಿ ಪ್ರಿಯಾಂಕಾ ಗಾಂಧಿ ಅರು ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿ ಮಹಿಳೆಯರ ಧ್ವನಿಯಾಗಿ ಸಂದೇಶ ನೀಡುತ್ತಿದ್ದಾರೆ' ಎಂದು ಹೇಳಿದರು. 

'ರಾಜ್ಯ ಹಾಗೂ ದೇಶದ ಜನಸಂಖ್ಯೆಯಲ್ಲಿ ಶೇ.50ರಷ್ಟು ಮಹಿಳೆಯರಿದ್ದಾರೆ. ಹೀಗಾಗಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಅವರ ಬದುಕಿನಲ್ಲಿ ಕಾಂಗ್ರೆಸ್ ಪಕ್ಷ ಕೊಡುಗೆ ನೀಡಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಕಾಂಗ್ರೆಸ್ ಪಕ್ಷ  ಮಹಿಳೆಯರಿಗೆ ನಾಯಕತ್ವ, ಶಕ್ತಿ ನೀಡುತ್ತಾ ಬಂದಿದೆ. ಈ ಹಿಂದೆ ಅಂಗನವಾಡಿ ಕಾರ್ಯಕ್ರಮ, ಆಶಾಕಾರ್ಯಕರ್ತರು, ಸ್ತ್ರೀಶಕ್ತಿ ಸ್ವಸಹಾಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ಮಾತ್ರ ಮಾಡಿಕೊಂಡು ಬಂದಿದೆ' ಎಂದರು.

Similar News