ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ "ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ": ಡಿ.ಕೆ.ಶಿವಕುಮಾರ್

Update: 2023-01-11 11:34 GMT

ಚಿಕ್ಕೋಡಿ: ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಕಾಂಗ್ರೆಸ್ ವತಿಯಿಂದ ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.

‘ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ ಎಂದರು.

1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ ಎಂದು ಅವರು ಹೇಳಿದರು.

ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ ಎಂದು ಅವರು ಹೇಳಿದರು.

ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದು ಎಂದು ಅವರು ಹೇಳಿದರು.

ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ ಎಂದು ಅವರು ಹೇಳಿದರು.

ಅಡುಗೆ ಅನಿಲದ ಬೆಲೆ 400 ರಿಂದ 1100 ರೂ. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾರಾದರೂ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದ್ದಾರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧಾನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು ಎಂದು ಅವರು ಹೇಳಿದರು.

ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದರು ಎಂದು ಅವರು ಹೇಳಿದರು.

ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ ಎಂದು ಅವರು ಹೇಳಿದರು.

Similar News