ಸಂಕ್ರಾಂತಿ ಎಂದರೆ ಸಮೃದ್ಧಿಯ ಸಂಕೇತ: ಡಾ.ಮೋಹನ್ ಚಂದ್ರಗುತ್ತಿ
ಕುವೆಂಪು ಶತಮಾನೋತ್ಸವ
ಶಿವಮೊಗ್ಗ, ಜ.13: ಸಂಕ್ರಾಂತಿ ಎಂದರೆ ಸಮೃದ್ಧಿಯ ಸಂಕೇತ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮೋಹನ್ ಚಂದ್ರಗುತ್ತಿ ಹೇಳಿದರು.
ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ ಸಂಕ್ರಾಂತಿ ಸುಗ್ಗಿ ಸಂಭ್ರಮ ಮತ್ತು ಸಾಂಪ್ರದಾಯಿಕ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿಯ ಪ್ರತಿಯೊಂದು ಆಚರಣೆಗಳು ಮನುಷ್ಯನ, ಸಂವೇದನೆ, ಜೀವನ ಪ್ರೀತಿಯನ್ನು ತೋರುತ್ತದೆ. ಕೂರಿಗೆಯಲ್ಲಿ ಬೀಜ ಬಿತ್ತುವಾಗ ಪೂಜೆ ಸಲ್ಲಿಸಲಾಗುತ್ತದೆ. ಅದು ನಮ್ಮ ಸಂಸ್ಕೃತಿ ಪ್ರೀತಿ ತೋರುತ್ತದೆ ಎಂದರು.
ನಮ್ಮ ಸಂಸ್ಕೃತಿ ಸಾರುವ ಕಾರ್ಯಕ್ರಮಗಳು ಕೇವಲ ಆಚರಣೆ, ತೋರಿಕೆಗೆ ಮಾತ್ರ ಸೀಮಿತವಾಗಿರದೆ, ಬದುಕಿನ ಜೊತೆಗೆ ಅಳವಡಿಸಿಕೊಂಡು, ಅದರ ಹಿನ್ನೆಲೆಯ ಅರ್ಥ ತಿಳಿಯಬೇಕು.ಕಾಲ ಬದಲಾದಂತೆ ನಮ್ಮ ಸಂವೇದನೆಗಳು ನಾಶವಾಗುತ್ತಿವೆ. ಸಣ್ಣ ಆನಂದವನ್ನೂ ಅನುಭವಿಸುವ ಕ್ಷಣ ನಮ್ಮ ನಡುವೆ ಇಲ್ಲ. ಮನುಷ್ಯ ತನ್ನನ್ನು ತಾನು ವಿನಾಶದ ಅಂಚಿಗೆ ಸರಿಸಿಕೊಳ್ಳುತ್ತಿದ್ದಾನೆ ಎಂದರು.
ಜಗತ್ತು ತನ್ನ ಪಥ ಬದಲಿಸಿಕೊಳ್ಳುತ್ತಿರುವಾಗ, ನಮ್ಮ ವಿವೇಕದ ದಾರಿ, ಜ್ಞಾನ ಪರಂಪರೆ, ಬದುಕಿನ ಹಲವು ಆಲೋಚನೆಯನ್ನು ಮರು ವಿನ್ಯಾಸ ಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಹೆಚ್.ಬಿ.ಆದಿಮೂರ್ತಿ, ಚಲನಚಿತ್ರ ಹಿನ್ನಲೆ ಗಾಯಕಿ ಕು.ಸಾದ್ವಿನಿಕೊಪ್ಪ, ಪ್ರಾಚಾರ್ಯ ಡಾ.ಮಧು, ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.