ಭಾರತದ ಯೋಗ ಪದ್ಧತಿಗೆ ವಿಶ್ವ ಮಾನ್ಯತೆ: ಶಾಸಕ ರಘುಪತಿ ಭಟ್

Update: 2023-01-15 13:03 GMT

ಉಡುಪಿ, ಜ.15: ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಿರುವ ಭಾರತದ ಯೋಗ ಪದ್ದತಿಗೆ ವಿಶ್ವ ಮಾನ್ಯತೆ ದೊರೆತಿದ್ದು, ಪ್ರತಿದಿನ ಯೋಗಾಸನ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮತ್ತು ಅಂಬಲಪಾಡಿ ಡಾ.ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರವಿವಾರ ಮಣಿಪಾಲದ ಎಂಡ್ ಪಾಯಿಂಟ್‌ನಲ್ಲಿ ಆಯೋಜಿಸ ಲಾದ ಯೋಗಥಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ವಿಶ್ವಸಂಸ್ಥೆಯು ಭಾರತದ ಯೋಗ ಪದ್ದತಿಯ ಮಹತ್ವವನ್ನು ಜಗತ್ತಿಗೆ ಸಾರಲು ಜೂ.21ರಂದು ವಿಶ್ವದಾದ್ಯಂತ ವಿಶ್ವಯೋಗ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡುವ ಮೂಲಕ ಯೋಗಕ್ಕೆ ವಿಶ್ವ ಮಾನ್ಯತೆ ದೊರೆತಿದೆ. ನಿರಂತರವಾಗಿ ಯೋಗಾಭ್ಯಾಸ ಮಾಡುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆಯಲು ಸಾಧ್ಯವಿದೆ. ಒತ್ತಡ ನಿವಾರಣೆಗೆ ಯೋಗ ಪರಿಹಾರ ನೀಡಲಿದ್ದು, ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿ ಕೊಳ್ಳುವ ಮೂಲಕ ಒತ್ತಡ ಮುಕ್ತ ಮತ್ತು ಆರೋಗ್ಯಯುತ ಜೀವನ ನಡೆಸಲು ಸಾಧ್ಯ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗಣಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಮಾಹೆಯ ಕರ್ನಲ್ ಪ್ರಕಾಶ್, ಡಾ.ವಿನೋದ್ ಮೊದಲಾದ ವರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು. ಸುಮಾರು 15000ಕ್ಕೂ ಅಧಿಕ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ನೊಂದಾಯಿಸಿಕೊಂಡು ಭಾಗವಹಿಸಿದ್ದರು.

ಮುಖ್ಯ ವೇದಿಕೆಯಲ್ಲಿ ರಾಜ್ಯ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೆ.ನರೇಂದ್ರ ಕಾಮತ್ ಯೋಗ ಗುರುಗಳ ವಿದ್ಯಾರ್ಥಿಗಳಾದ ಶಿವಾನಿ ಶೆಟ್ಟಿ, ಅನ್ವಿ, ಲಾಸ್ಯ, ಉದ್ಭವ್ ದೇವಾಡಿಗ, ಕವನ, ತನುಶ್ರೀ ಪ್ರದರ್ಶನ ನೀಡಿದರು.

Similar News