ಮುಂದಿನ 10 ವರ್ಷಗಳು ‘ನೀರಾವರಿ ದಶಕ': ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

Update: 2023-01-19 17:46 GMT

ಕೋಡೆಕಲ್(ಯಾದಗಿರಿ), ಜ.19: ಮುಂದಿನ ಹತ್ತು ವರ್ಷಗಳನ್ನು ನೀರಾವರಿ ದಶಕವೆಂದು ಘೋಷಿಸಲಾಗುವುದು. ಈ ಮೂಲಕ 10 ವರ್ಷಗಳಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಯಾದಗಿರಿ ಜಿಲ್ಲೆಯ ಕೋಡೆಕಲ್ ಹೊರವಲಯದಲ್ಲಿ ಏರ್ಪಡಿಸಿದ್ದ 10,863 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಜ್ಯದಲ್ಲಿ 40.66ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶದ ಗುರಿ ಇದ್ದು, ಇದುವರೆಗೆ 30 ಲಕ್ಷ ಹೆಕ್ಟೇರ್ ಭೂಮಿಗೆ ನೀರುಣಿಸಲಾಗುತ್ತಿದ್ದು, ಬಾಕಿ ಉಳಿದ 10.66ಲಕ್ಷ ಹೆಕ್ಟೇರ್ ಭೂಮಿಯನ್ನು ನೀರಾವರಿಗೆ ಒಳಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ನಾರಾಯಣಪುರ ಎಡದಂಡೆ ಕಾಲುವೆಯ ವಿಸ್ತರಣೆ, ಪುನಃಶ್ಚೇತನ ಹಾಗೂ ಆಧುನೀಕರಣ ಯೋಜನೆ ಮತ್ತು ಸ್ಕಾಡಾ ತಂತ್ರಜ್ಞಾನದ ಅಳವಡಿಕೆಯಿಂದಾಗಿ ಅಚ್ಚುಕಟ್ಟು ಪ್ರದೇಶದ ಎಲ್ಲ ರೈತರ ಜಮೀನುಗಳಿಗೆ ನೀರು ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಸ್ಕಾಡಾ ತಂತ್ರಜ್ಞಾನದಿಂದಾಗಿ ಉತ್ತರ ಕರ್ನಾಟಕದ ಬರಪೀಡಿತ ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ 4.50 ಲಕ್ಷ ಹೆಕ್ಟರ್ ಪ್ರದೇಶದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ರೈತರ ಜಮೀನುಗಳಿಗೆ ಸಮ ಪ್ರಮಾಣದಲ್ಲಿ ನೀರು ಲಭ್ಯವಾಗಲಿದೆ ಎಂದ ಅವರು, ಈ ತಂತ್ರಜ್ಞಾನದಿಂದ ನೀರಿನ ಬಳಕೆಯ ದಕ್ಷತೆ ಶೇ.20ರಷ್ಟು ಹೆಚ್ಚಾಗಲಿದೆ ಎಂದರು.

ಈ ಯೋಜನೆಯು ಇಡೀ ಏಷ್ಯಾ ಖಂಡದಲ್ಲಿಯೇ ದೊಡ್ಡ ಯೋಜನೆಯಾಗಿದೆ. ಈ ರೀತಿಯ ಯೋಜನೆಗಳನ್ನು ಇನ್ನು ಮುಂದೆಯೂ ಕರ್ನಾಟದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಅವರು ಹೇಳಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ಥಳೀಯ ಶಾಸಕರು ಆಗಿರುವ ಸುರಪುರದ ರಾಜುಗೌಡ (ನರಸಿಂಹನಾಯಕ್) ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ವೆಂಕಟರೆಡ್ಡಿ ಮುದ್ನಾಳ್, ಎ.ಎಸ್.ಪಾಟೀಲ್ ನಡಹಳ್ಳಿ, ರಮೇಶ ಸಿಂದಗಿ, ಸೋಮನಗೌಡ ಹಿಪ್ಪರಗಿ ಉಪಸ್ಥಿತರಿದ್ದರು.

Similar News