ಸಿಐಡಿ ಅಧಿಕಾರಿಗಳ ದಾಳಿ ವೇಳೆ PSI ಹಗರಣ ಆರೋಪಿ ಆರ್.ಡಿ. ಪಾಟೀಲ್ ಪರಾರಿ
Update: 2023-01-20 12:32 IST
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಡೆ ಇದ್ದ ಆರ್.ಡಿ. ಪಾಟೀಲ್ ನಗರದ ಅಕ್ಕಮಹಾದೇವಿ ಲೇಔಟ್ ಮನೆಯಿಂದ ಗುರುವಾರ ರಾತ್ರಿ ಪರಾರಿಯಾಗಿರುವುದು ವರದಿಯಾಗಿದೆ.
ಈ ಸಂಬಂಧ ಸಿಐಡಿ ಅಧಿಕಾರಿಗಳು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಿಎಸ್ಐ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್ ನೀಡಲು ಸಿಐಡಿ ಅಧಿಕಾರಿಗಳು ಆರ್.ಡಿ. ಪಾಟೀಲ್ ಮನೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ ಎಂದು ಸಿಐಡಿ ಡಿಟೆಕ್ಟಿವ್ ಸಬ್ ಇನ್ ಸ್ಪೆಕ್ಟರ್ ಆನಂದ್ ದೂರಿನಲ್ಲಿ ತಿಳಿಸಿದ್ದಾರೆ.
ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ಆರ್.ಡಿ. ಪಾಟೀಲ ಮನೆಯಿಂದ ನಾಪತ್ತೆಯಾಗಿದ್ದಾನೆ. ಅದ್ದರಿಂದ ಅತನಿಗೆ ನೀಡಿದ ಜಾಮೀನು ರದ್ದುಪಡಿಸಬೇಕು ಎಂದು ಕೋರಿ ಸಿಐಡಿ ಅಧಿಕಾರಿಗಳು ಕೆಲ ದಿನಗಳ ಹಿಂದೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.