ಒಂದು ಮತಕ್ಕೆ 6 ಸಾವಿರ ರೂ. ಆಮಿಷ ಆರೋಪ: ಸಿಎಂ ಸೇರಿ BJP ನಾಯಕರ ವಿರುದ್ಧ ಕಾಂಗ್ರೆಸ್ ದೂರು

Update: 2023-01-25 15:45 GMT

ಬೆಂಗಳೂರು, ಜ.25: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಮತದಾರರಿಗೆ 6 ಸಾವಿರ ನೀಡಿ ಮತಯಾಚಿಸುತ್ತೇವೆ. ಜತೆಗೆ, ಎದುರಾಳಿ ಅಭ್ಯರ್ಥಿ ಖರ್ಚಿಗಿಂತ 10 ಕೋಟಿ ಹೆಚ್ಚಾಗಿ ಖರ್ಚು ಮಾಡಲು ನಾವು ಸಿದ್ಧವಿದ್ದೇವೆಂದು ಹೇಳಿಕೆ ನೀಡಿರುವಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಬುಧವಾರಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನಿಯೋಗ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ, ವಿಡಿಯೊ ದಾಖಲೆ ನೀಡಿದರು.  

ರಮೇಶ್ ಜಾರಕಿಹೊಳಿ, ಪ್ರತಿ ಮತದಾರನಿಗೆ 6 ಸಾವಿರ ರೂಪಾಯಿ ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ರಮೇಶ್ ಜಾರಕಿಹೊಳಿ, ಅವರಿಗೆ ಪ್ರೇರಣೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೇಲ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿ ನಡೆಯನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಮಾಜಿ ಮಂತ್ರಿಗಳು, ಬಿಜೆಪಿ ಶಾಸಕರು ನಾವು ಮುಂಬರುವ ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ಆದರೂ ಸರಕಾರ ರಚನೆ ಮಾಡುತ್ತೇವೆ ಎಂಬ ಸಂಕಲ್ಪ ಮಾಡಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂದೂ ಟೀಕಿಸಿದರು.

ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಮೂರ್ನಾಲ್ಕು ಶಾಸಕರ ಹೇಳಿಕೆಗಳು, ರಾಜ್ಯದ ಮತದಾರರಿಗೆ ಆಮೀಷ ಒಡ್ಡುತ್ತಿರುವುದರ ಸ್ಪಷ್ಟ ಉದಾಹರಣೆ ಆಗಿವೆ. ಬಿಜೆಪಿ ಸರಕಾರ ಶೇ.40ರಷ್ಟು ಕಮಿಷನ್ ಮೂಲಕ ಸಾವಿರಾರು ಕೋಟಿ ಹಣ ಸಂಗ್ರಹಿಸಿದೆ. ಇತ್ತೀಚೆಗೆ ಬಿಜೆಪಿ ನಾಯಲ ರಮೇಶ್ ಜಾರಕಿಹೊಳಿ ಅವರು ಪ್ರತಿ ಮತಕ್ಕೆ 6 ಸಾವಿರ ನೀಡುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಎದುರಾಳಿ ಅಭ್ಯರ್ಥಿ ಎಷ್ಟೇ ಖರ್ಚು ಮಾಡಿದರೂ ಅದಕ್ಕಿಂತ 10ಕೋಟಿ ಹೆಚ್ಚಿನ ಮೊತ್ತವನ್ನು ಖರ್ಚು ಮಾಡುವುದಾಗಿ ಅವರು ಹೇಳಿರುವ ವಿಡಿಯೋ, ಮಾಧ್ಯಮ ವರದಿ ದಾಖಲೆಗಳಿವೆ ಎಂದರು.

ದಾಖಲೆಗಳ ಸಮೇತ ನಾನು, ಸಿದ್ದರಾಮಯ್ಯ ಹಾಗೂ ಪಕ್ಷದ ಇತರ ನಾಯಕರೆಲ್ಲರೂ ಸೇರಿ ಹೈಗ್ರೌಂಡ್ಸ್ ಪೆÇೀಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಬಿಜೆಪಿಯವರು ರಾಜ್ಯದ 5 ಕೋಟಿ ಮತದಾರರಿಗೆ ಪ್ರತಿಯೊಬ್ಬರಿಗೆ 6 ಸಾವಿರ ರೂ.ನಂತೆ ಒಟ್ಟು 30 ಸಾವಿರ ಕೋಟಿ ಹಣ ಹಂಚಲು ತಯಾರಿ ಮಾಡಿಕೊಂಡಿದ್ದಾರೆ. ಹೀಗಾಗಿ ಮತದಾರರಿಗೆ ಆಮಿಷ ಒಡ್ಡುತ್ತಿರುವ ಬಿಜೆಪಿ ವಿರುದ್ಧ ದಾಖಲೆ ಸಮೇತ ಐಪಿಸಿ ಸೆಕ್ಷನ್ 171ಬಿ, 506, ಜನಪ್ರತಿನಿಧಿ ಕಾಯ್ದೆ 123 ಪ್ರಕಾರ ದೂರು ದಾಖಲಿಸಿದ್ದೇವೆ ಎಂದರು.

ಪೊಲೀಸ್ ಅಧಿಕಾರಿಗಳು ಈ ಕೂಡಲೇ ಎಫ್‍ಐಆರ್ ದಾಖಲಿಸಬೇಕು. ಈ ದೇಶದ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ನಾವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ನೀಡಿದ್ದೇವೆ. ಅವರ ಪಕ್ಷದ ನಾಯಕರು ಇಂತಹ ಹೇಳಿಕೆ ಕೊಟ್ಟರು ಯಾವುದೇ ಶಿಸ್ತಿನ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಾವು ಆ ಪಕ್ಷದ ಮುಖ್ಯಸ್ಥರ ಮೇಲೂ ದೂರು ನೀಡುತ್ತಿದ್ದೇವೆ. ಈ ಸಂಬಂಧ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಪ್ರಮುಖರಿದ್ದರು.

''ಸಿಎಂ, ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳಿ''

ಮತದಾರನಿಗೆ 6 ಸಾವಿರರೂ. ಲಂಚದ ಬಹಿರಂಗ ಆಮಿಷದ ಮೂಲಕ ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಿ.

-ಸಿದ್ದರಾಮಯ್ಯ, ವಿಪಕ್ಷ ನಾಯಕ, ವಿಧಾನಸಭೆ

Similar News