ಉಡುಪಿ ಜಿಲ್ಲಾ ಕಾರ್ಯನಿರತ‌ ಪತ್ರಕರ್ತರ‌ ಸಂಘದ ರಜತ ಮಹೋತ್ಸವ ಲಾಂಛನ ಬಿಡುಗಡೆ‌

Update: 2023-01-27 11:02 GMT

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಅಂಗವಾಗಿ ನೂತ‌ನ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಅನಾವರಣಗೊಳಿಸಿದರು. 

ಬಳಿಕ ಮಾತನಾಡಿದ ಮುಖ್ಯಮಂತ್ರಿ, ಉಡುಪಿ ಜಿಲ್ಲೆ ರಜತ ಮಹೋತ್ಸವ ಆಚರಿಸಿದ ಸಂದರ್ಭದಲ್ಲಿಯೇ ಜಿಲ್ಲೆಯ ಪತ್ರಕರ್ತರ ಸಂಘ‌ಕ್ಕೂ 25 ವರ್ಷಗಳು ತುಂಬುತ್ತಿವೆ. ಸಾರ್ವಜನಿಕ ಸೇವೆಯಲ್ಲಿ ತಮ್ಮ ಕರ್ತವ್ಯವನ್ನು ಪ್ರಾಮಾಣಿಕ, ನಿಷ್ಠೆಯಿಂದ ನಿಬಾಯಿಸಿ ಜಿಲ್ಲೆಯ‌ ಅಭಿವೃದ್ಧಿಗೆ‌ ಪೂರಕವಾಗಿ ಕೆಲಸದ ಮಾಡುತ್ತಿರುವ ಪತ್ರಕಕರ್ತರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ವರ್ಷವಿಡೀ 25 ಕಾರ್ಯಕ್ರಮ, ಪತ್ರಕರ್ತರ ಆರೋಗ್ಯಕ್ಕಾಗಿ ಕ್ಷೇಮಾಭಿವೃದ್ಧಿ ನಿಧಿ‌ ಸ್ಥಾಪನೆಗೆ ಬೇಕಾದ ನೆರವನ್ನು ಸರಕಾರದಿಂದ ನೀಡಲಾಗುವುದು. ಈ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಅವರು ಹಾರೈಸಿದರು.

ರಜತ ಮಹೋತ್ಸವ ಸಮಿತಿ ಸಂಚಾಲಕ ಮೊಹಮ್ಮದ್ ಶರೀಫ್ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾ಼ಧಿಕಾರಿ ಉಮೇಶ್ ಮಾರ್ಪಳ್ಳಿ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕಾರ್ಕಳ‌ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಣ ಗಣೇಶ್ ನಾಯಕ್,  ಕಾರ್ಯದರ್ಶಿ ಹರೀಶ್‌ ಆಚಾರ್ಯ, ಆ್ಯಸ್ಟ್ರೋ ಮೋಹನ್ ಹಾಜರಿದ್ದರು. ರಜತ ಮಹೋತ್ಸವ ಸಮಿತಿ ಜತೆ ಕಾರ್ಯದರ್ಶಿ‌ ದೀಪಕ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

ರಾಜ್ಯ ಇಂಧನ, ಕನ್ನಡ ಮತ್ತು‌ ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ.‌ಮೈಸೂರು ಎಲೆಕ್ಟ್ರಿಕ್‌ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ‌ ಕೆ‌.ಉದಯ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ.,‌ ಜಿ.ಪಂ.ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್., ರಾಜ್ಯ ಗೇರು‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಯತೀಶ್ ಉಪಸ್ಥಿತರಿದ್ದರು.

Similar News