PSI ಹಗರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆ ಪಿ.ಬಿ.ವರಾಳೆ

Update: 2023-01-27 17:56 GMT

ಬೆಂಗಳೂರು, ಜ.27: ಪಿಎಸ್ಸೈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ದಾಖಲಾಗಿರುವ ಎಫ್‌ಐಆರ್ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಹಿಂದೆ ಸರಿದಿದೆ.

ಮಾಜಿ ಸಚಿವ, ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಈ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ನಿಗದಿಯಾಗಿತ್ತು. ಈ ಕೇಸ್‌ನ್ನು ಬೇರೊಂದು ಪೀಠದ ಮುಂದೆ ಪಟ್ಟಿ ಮಾಡುವಂತೆ ಪೀಠವು ಆದೇಶಿಸಿತು.

ಏನಿದೆ ಅರ್ಜಿಯಲ್ಲಿ: ಪಿಎಸ್ಸೈ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ವಿವಿಧೆಡೆ ದಾಖಲಾಗಿರುವ ಎಫ್‌ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ಸಲ್ಲಿಸುವಂತೆ ಸಿಐಡಿಗೆ ಆದೇಶಿಸಬೇಕು. ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಮೃತ್ ಪೌಲ್ ಬಂಧನದ ನಂತರದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ನಡೆಸಲು ರಾಜ್ಯ ಸರಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

Similar News